ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಇಂದು ಸಂಜೆ ಮಹತ್ವದ ಸಭೆ
ಮಂಗಳೂರು, ಮಾರ್ಚ್ 21:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಹೊಯ್ದಾಟ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ಕೆ.ಎಸ್ ವೇಣುಗೋಪಾಲ್ ಮನೆಯಲ್ಲಿ ಇಂದು ಸಂಜೆ ಮಹತ್ವದ ಸಭೆ ನಡೆಯಲಿದ್ದು, ಮಾಜಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಚಿವ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಗೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರನ್ನು ಈಗಾಗಲೇ ದೆಹಲಿಗೆ ಕರೆಸಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಸಚಿವ ರಮಾನಾಥ್ ರೈ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ , ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್, ಕಾಂಗ್ರೆಸ್ ಮುಖಂಡ ಕನ್ನಚ್ಚರ್ ಮೋನು, ಮೊಯ್ದಿನ್ ಬಾವಾ, ಟಿಕೆಟ್ ಗಾಗಿ ಭಾರೀ ಲಾಬಿ ನಡೆಸುತ್ತಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿ;ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಸುಲಭವೇ?
ಈ ಹಿನ್ನೆಲೆಯಲ್ಲಿ ಕ್ಷೇತ್ರದ ಎಲ್ಲಾ ಟಿಕೆಟ್ ಆಕಾಂಕ್ಷಿ ಗಳು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. 1991 ರ ಚುನಾವಣೆ ಬಳಿಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಇಲ್ಲಿ ಕಾಂಗ್ರೆಸ್ ಅಧಿಪತ್ಯ ಸ್ಥಾಪಿಸುವ ಕನಸನ್ನು ಕಾಣುತ್ತಲೇ ಬಂದಿದೆ. ಆದರೆ ಈವರೆಗೆ ಸಾಧ್ಯವಾಗಿಲ್ಲ.
ಈ ಕ್ಷೇತ್ರದಲ್ಲಿ 7 ಬಾರಿ ಬಿಜೆಪಿ ಸಂಸದರೇ ಸತತವಾಗಿ ಈ ಕ್ಷೇತ್ರದಿಂದ ಆಯ್ಕೆಯಾಗುತ್ತಿದ್ದಾರೆ. ಈ ಬಾರಿ ಹಾಲಿ ಸಂಸದ ನಳಿನ್ ಕುಮಾರ್ ಮೇಲೆ ಸ್ವ ಪಕ್ಷದಲ್ಲೇ ಅಪಸ್ವರ ಕೇಳಿ ಬರುತ್ತಿದ್ದು, ಕ್ಷೇತ್ರದಲ್ಲಿ ಆಗದ ಅನೇಕ ಅಪೂರ್ಣ ಕಾಮಗಾರಿಗಳ ತೂಗುಕತ್ತಿ ಒಂದೆಡೆಯಾದರೆ, ಟಿಕೆಟ್ ಆಕಾಂಕ್ಷಿಗಳ ಲಾಭಿ ಇನ್ನೊಂದೆಡೆ ನಳಿನ್ ಗೆ ಅಡ್ಡಗಾಲು ಹಾಕುತ್ತಿವೆ.
ದಕ್ಷಿಣ ಕನ್ನಡದಲ್ಲಿ ಕೈ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ
ಇಂತಹ ಸಂದರ್ಭದಲ್ಲಿ ಗೆಲ್ಲುವ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದರೆ ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಪಾಳಯದಲ್ಲಿ ಆರಂಭವಾಗಿದೆ.ಈ ಬಾರಿ ದಕ್ಷಿಣ ಕನ್ನಡ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲೇಬೇಕು ಎಂದು ಕಾಂಗ್ರೆಸ್ ಪಣತೊಟ್ಟಿದೆ.