ಬಂಡಾಯ ಬಾವುಟ ಹಾರಿಸಿದ ಕಾಂಗ್ರೆಸ್ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ
ಮಂಗಳೂರು, ಏಪ್ರಿಲ್ 19: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ ಗೊಂಡಿದೆ.
ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಹಾಗು ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಕಾಂಗ್ರೆಸ್ ವರಿಷ್ಠರ ವಿರುದ್ದ ತೊಡೆ ತಟ್ಟಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಿಂದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿಜಯ ಕುಮಾರ್ ಶೆಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವರಿಷ್ಠರ ವಿರುದ್ಧ ವಿಜಯ ಕುಮಾರ್ ಶೆಟ್ಟಿ ಬಹಿರಂಗ ವಾಗಿಯೇ ಹೇಳಿಕೆ ನೀಡಿದ್ದು, "ತಮಗೆ ಕಾಂಗ್ರೆಸ್ ಹಿರಿಯ ನಾಯಕರು ನೀಡಿದ ಭರವಸೆಗಳು ಭರವಸೆಯಾಗಿಯೇ ಉಳಿದಿವೆ. ಕಾಂಗ್ರೆಸ್ ನ ಹಿರಿಯ ನಾಯಕರು ತಮ್ಮ ಮಾತನ್ನೇ ಉಳಿಸಿಕೊಂಡಿಲ್ಲ. ಇನ್ನು ಕ್ಷೇತ್ರದಲ್ಲಿ ಗೆಲ್ಲುವುದಾರೂ ಹೇಗೆ?" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ನನಗೆ ಈ ಮೊದಲು ವಿಧಾನ ಪರಿಷತ್ ಸದಸ್ಯತ್ವ ನೀಡುವುದಾಗಿ ಭರವಸೆ ನೀಡಲಾಗಿತ್ತು. ನಂತರದ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವುದಾಗಿ ತಿಳಿಸಿದ್ದರು. ಅದರೆ ಭರವಸೆಗಳು ಭರವಸೆಯಾಗಿಯೇ ಉಳಿದಿವೆ ಎಂದು ಅವರು ವಿಷಾದ ವ್ಯಪ್ತಪಡಿಸಿದರು.
"ಈ ಬಾರಿ ಚುನಾವಣೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಅದರೆ ಈ ಬಾರಿ ಕೂಡ ಟಿಕೆಟ್ ನೀಡದೇ ಅನ್ಯಾಯ ಮಾಡಿದ್ದಾರೆ," ಎಂದು ಅಕ್ರೋಶ ವ್ಯಕ್ತಪಡಿಸಿದ ಅವರು, "ಕಾಂಗ್ರೆಸ್ ಪಕ್ಷಕ್ಕೆ ನಾನು ಬೇಡ ಎಂದಾದ ಮೇಲೆ ಇಲ್ಲಿ ಉಳಿಯುವ ಪ್ರಶ್ನೆ ಇಲ್ಲ," ಎಂದು ಕಿಡಿಕಾರಿದರು.
ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದು ಬಹುತೇಕ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಜೊತೆಗೆ ಇಂದು ಬಿಡುಗಡೆಯಾದ ಬಿಜೆಪಿ ಪಟ್ಟಿಯಲ್ಲಿ ಉತ್ತರ ಕ್ಷೇತ್ರದಲ್ಲಿ ಭರತ್ ಶೆಟ್ಟಿಗೆ ಟಿಕೆಟ್ ನೀಡಲು ಅವರೇ ಕಾರಣ ಎಂಬ ಮಾತುಗಳೂ ಕೇಳಿ ಬರುತ್ತಿವೆ.
ಕೃಷ್ಣ ಪಾಲೆಮಾರ್ ಗೆ ಟಿಕೆಟ್ ನೀಡಬಾರದು ಎಂದು ವಿಜಯ್ ಕುಮಾರ್ ಶೆಟ್ಟಿ ಷರತ್ತು ವಿಧಿಸಿದ್ದರಿಂದ ಭರತ್ ಶೆಟ್ಟಿಗೆ ಬಿಜೆಪಿ ಟಿಕೆಟ್ ನೀಡಿದೆ ಎನ್ನಲಾಗಿದೆ.
ಕೈ ಕಾರ್ಯಕರ್ತರಲ್ಲಿ ಗೊಂದಲ
ಮಂಗಳೂರು ಉತ್ತರ ಕ್ಷೇತ್ರ ದಲ್ಲಿ ಬಂಡಾಯ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗೊಂದಲ ಸೃಷ್ಠಿಯಾಗಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ವಿಜಯ ಕುಮಾರ ಶೆಟ್ಟಿ ಬಂಡಾಯದ ಬಾವುಟ ಹಾರಿಸಿರುವುದು ಕಾಂಗ್ರೆಸ್ ನಾಯಕರಿಗೆ ನುಂಗಲಾರದ ತುತ್ತಾಗಿದೆ.
ಈ ಬಂಡಾಯವನ್ನು ಕಾಂಗ್ರೆಸ್ ನಾಯಕರು ಹೇಗೆ ಶಮನ ಗೊಳಿಸುತ್ತಾರೆ ಎಂಬುದೇ ಈಗ ಕುತೂಹಲ ಮೂಡಿಸಿದೆ.
ನೇತ್ರಾವತಿ ನದಿ ತಿರುವು ಹೋರಾಟದಲ್ಲಿ ಸಕ್ರಿಯರಾಗಿದ್ದ ವಿಜಯ ಕುಮಾರ್ ಶೆಟ್ಟಿ, ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡದಿರುವುದಕ್ಕೆ ಈ ಹಿಂದೆ ಅಸಮಾಧಾನ ವ್ಯಕ್ತಪಡಿಸಿದ್ದರು. ರಮಾನಾಥ್ ರೈ ಅವರಿಗೆ ಗೃಹ ಖಾತೆ ದೊರಕುವ ಸಾಧ್ಯತೆ ಇದೆ ಎಂಬ ಸುದ್ದಿ ಬಹಿರಂಗಗೊಂಡಿದ್ದ ಸಂದರ್ಭದಲ್ಲಿ ಅವರು ರೈ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಯಾವುದೇ ಕಾರಣಕ್ಕೂ ಗೂಂಡಾ ಮಂತ್ರಿಗೆ ಗೃಹ ಖಾತೆ ನೀಡಬಾರದು ಎಂದು ಕಿಡಿಕಾರಿದ್ದರು.












Click it and Unblock the Notifications