ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲಾಗಿದೆ: ರಮಾನಾಥ ರೈ ಆರೋಪ
ಮಂಗಳೂರು, ನವೆಂಬರ್ 18: ನವೆಂಬರ್ 19 ಮತ್ತು 20ರಂದು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಲಿರುವ ಕನ್ನಡ ಶಾಲಾ ಮಕ್ಕಳ ಹಬ್ಬಕ್ಕೆ ಕಾಂಗ್ರೆಸ್ ಅಪಸ್ವರ ಎತ್ತಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ತನ್ನ ಆಡಳಿತವನ್ನು ದುರುಪಯೋಗ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪ ಮಾಡಿದ್ದಾರೆ.
ಕೇಶವ ಸ್ಮೃತಿ ಸಂವರ್ಧನಾ ಸಮಿತಿಯಿಂದ ನಡೆಯುವ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮವನ್ನು ರಾಜಕೀಯಗೊಳಿಸುತ್ತಿರುವ ಬಗ್ಗೆ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮಾನಾಥ ರೈ, ಸಂಘನಿಕೇತನದ ಕಾರ್ಯಕ್ರಮಕ್ಕಾಗಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರಲು ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಶಿಕ್ಷಕರಿಗೆ ನೋಟಿಸ್ ಕಳುಹಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮಕ್ಕಳ ಪ್ರತಿಭಾ ಪ್ರದರ್ಶನ ಹೆಸರಲ್ಲಿ ಕಾರ್ಯಕ್ರಮವನ್ನು ರಾಜಕೀಯಗೊಳಿಸಲಾಗುತ್ತಿದೆ. ಬಿಜೆಪಿಯ ನಾಯಕರನ್ನೇ ಕಾರ್ಯಕ್ರಮದ ನೋಡೆಲ್ ಅಧಿಕಾರಿಯನ್ನಾಗಿ ಮಾಡಲಾಗಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.

ಕನ್ನಡ ಮಾಧ್ಯಮ ಮಕ್ಕಳ ಆತ್ಮ ವಿಶ್ವಾಸ ಹೆಚ್ಚಿಸಲು ನವೆಂಬರ್ 19 ಮತ್ತು 20 ರಂದು ಮಂಗಳೂರಿನ ಸಂಘನಿಕೇತನದಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಐದನೇ ತರಗತಿಯಿಂದ ಹತ್ತನೆಯ ತರಗತಿವರೆಗಿನ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಲಿದೆ.
ಎರಡು ದಿನಗಳ ಕಾರ್ಯಕ್ರಮ ದಲ್ಲಿ ಕನ್ನಡ ನಾಡಿನ ಇತಿಹಾಸ, ಕನ್ನಡ ಭಾಷೆ, ಸಾಹಿತ್ಯದ ಮಹತ್ವ, ಪುಸ್ತಕ ಪ್ರದರ್ಶನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಘನಿಕೇತನದ ಮೂರು ವೇದಿಕೆಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಹದಿನೈದು ಸಾವಿರಕ್ಕೂ ಅಧಿಕ ಕನ್ನಡ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕನ್ನಡ ಶಾಲಾಮಕ್ಕಳ ಹಬ್ಬದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಡಾ.ಎಂ ಮೋಹನ್ ಆಳ್ವ ಕಾರ್ಯಕ್ರಮದ ಬಗ್ಗೆ ಇತ್ತೀಚಿಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು.












Click it and Unblock the Notifications