ಡಿಕೆಶಿ ಭಯೋತ್ಪಾದನೆಗೆ ಸಹಕಾರ ನೀಡುತ್ತೇನೆಂದು ಹೇಳಿದ್ದಾರೆಯೇ..?- ಸಿದ್ದರಾಮಯ್ಯ
ಮಂಗಳೂರು, ಡಿಸೆಂಬರ್ 17: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ಮಾತನಾಡಿದ್ದಾರೆ.
ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರಿಗೆ ಇಂತಹ ಹೇಳಿಕೆಗಳೇ ಬೇಕಾಗಿರುವುದು. ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅದು ಬಿಟ್ಟು ಭಯೋತ್ಪಾದನೆಗೆ ಸಹಕಾರ ನೀಡುತ್ತೇನೆಂದು ಹೇಳಿದ್ದಾರೆಯೇ..? ಬಿಜೆಪಿಯವರು ಅದನ್ನು ಅನುಕೂಲಕ್ಕೆ ತಕ್ಕಂತೆ ತಿರುಚಿ ಜನಗಳ ಮುಂದೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ದೇಶದಲ್ಲಿ ಭಯೋತ್ಪಾದನೆ ಇದ್ದರೆ ಬಿಜೆಪಿಯವರು ಹತ್ತಿಕ್ಕಲಿ. ಅವರಿಗೆ ಅಧಿಕಾರವಿದೆ, ಡಬಲ್ ಇಂಜಿನ್ ಸರಕಾರವಿದೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷವಾಯಿತ್ತಲ್ಲಾ ಭಯೋತ್ಪಾದನೆಯನ್ನು ಹತ್ತಿಕ್ಕಲಿ. ದೇಶದಲ್ಲಿ ಎಲ್ಲೆಲ್ಲಿ ಉಗ್ರಗಾಮಿ ಚಟುವಟಿಕೆ ನಡೆಯುತ್ತಿದೆಯೋ ಅದನ್ನು ಹತ್ತಿಕ್ಕಲಿ. ಅವರಿಗೆ ಅಧಿಕಾರ ಕೊಟ್ಟದ್ದೇಕೆ ಮತ್ತೆ. ಬರೀ ಜನರನ್ನು ಪ್ರಚೋದಿಸಿ ಭಾವನಾತ್ಮಕ ವಿಚಾರಗಳನ್ನು ಜನರ ಮುಂದೆ ಇಡೋದಕ್ಕಲ್ಲ ಅಧಿಕಾರ ನೀಡೋದಲ್ಲ ಎಂದು ಹೇಳಿದ್ದಾರೆ.

ಮಾತು ಮುಂದುವರಿದಿದ ಅವರು, ನೈತಿಕ ಪೊಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಸಿಎಂ ಬೊಮ್ಮಾಯಿಯವರು ಇದಕ್ಕೆ ಪ್ರೋತ್ಸಾಹಿಸುವ ಹೇಳಿಕೆ ನೀಡುತ್ತಿದ್ದಾರೆ. ಸುಮಾರು ಏಳೆಂಟು ಪ್ರಕಣಗಳಾಗಿದ್ದು, ಇದನ್ನು ನಾನು ಖಂಡಿಸುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ತಗೆದುಕೊಳ್ಳಲಿ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಇನ್ನು ಸಿಎಂಗೆ ಕಾನೂನು ಗೊತ್ತಿದೆಯೇ ಎಂದು ನನಗೆ ಅರಿವಿಲ್ಲ. ಸಂವಿಧಾನದಲ್ಲಿ ಇದಕ್ಕೆ ಎಲ್ಲಾದರೂ ಅವಕಾಶವಿದೆಯೇ..? ಪೊಲೀಸರು ಇರೋದೇಕೆ ಮತ್ತೆ..? ಅನಗತ್ಯವಾಗಿ ಇನ್ನೊಬ್ಬರ ವಿಚಾರದಲ್ಲಿ ಪ್ರವೇಶ ಮಾಡೋದನ್ನು ನಾನು ಖಂಡಿಸುತ್ತೇನೆ. ಸರ್ಕಾರವೂ ಇದಕ್ಕೆ ಅವಕಾಶ ಕೊಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications