ಬಂಟ್ವಾಳದಲ್ಲಿ ಒಂದೇ ಮನೆಯ 9 ಮಂದಿಗೆ ಕೊರೊನಾ ವೈರಸ್ ದೃಢ
ಮಂಗಳೂರು, ಮಾರ್ಚ್ 22: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಹಾಗೂ ಮೊದಲ ಮೃತ್ಯು ಪ್ರಕರಣ ದಾಖಲಾಗಿದ್ದ ಬಂಟ್ವಾಳ ತಾಲ್ಲೂಕಿನಲ್ಲಿ ಕೊರೊನಾ ಭೀತಿ ಜನರಲ್ಲಿ ಇಲ್ಲದೇ ಇದ್ದರೂ ಪ್ರತಿ ದಿನ ಸುಮಾರು 3ರಿಂದ 5ರಷ್ಟು ಪ್ರಕರಣಗಳು ದಾಖಲಾಗುತ್ತಿವೆ.
ಆದರೆ ಸರಕಾರಿ ಆಸ್ಪತ್ರೆ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಪ್ರತಿದಿನ ಸರಾಸರಿ 750 ಮಂದಿ ಬಂಟ್ವಾಳ ತಾಲ್ಲೂಕಿನಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್ಕ್ ಸೋಮವಾರ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡರು.
ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿಯ ಒಂದೇ ಮನೆಯಲ್ಲಿ ಒಟ್ಟು 9 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇದೇ ರೀತಿ ಸೋಂಕಿಗೆ ತುತ್ತಾದವರ ಸಂಖ್ಯೆ 43 ಇದ್ದು, ಕಳೆದ 10 ದಿನಗಳಲ್ಲಿ 21 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ.

ಬಂಟ್ವಾಳ ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆಗಳನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ತಿಳಿಸಿದ್ದಾರೆ.
ವಾರದ ಪ್ರತಿ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರಗಳಂದು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 4ರೊಳಗೆ ಆಧಾರ್ ಕಾರ್ಡ್ ಮತ್ತು ಮೊಬೈಲ್ ಜತೆ 60 ವರ್ಷಕ್ಕೆ ಮೇಲ್ಪಟ್ಟವರು ಹಾಗೂ 45ರಿಂದ 60 ವರ್ಷದೊಳಗಿನವರು ಇವುಗಳೊಂದಿಗೆ ಆರೋಗ್ಯ ಸಮಸ್ಯೆ ಕುರಿತ ಸ್ಥಳೀಯ ವೈದ್ಯರಿಂದ ದೃಢೀಕರಣ ಪತ್ರಗಳನ್ನು ತೆಗೆದುಕೊಂಡು ಬಂದರೆ ಉಚಿತ ಲಸಿಕೆ ನೀಡಲಾಗುತ್ತದೆ.
ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರದಿಂದ ಶನಿವಾರದವರೆಗೆ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ, ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.












Click it and Unblock the Notifications