ಮುನ್ನಡೆಯಲ್ಲಿ ಬಿಜೆಪಿ; ಫಲಿತಾಂಶಕ್ಕೆ ಮುನ್ನವೇ ವಿಜಯೋತ್ಸವ
ಮಂಗಳೂರು ಮೇ 23: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿ ಎದುರು ಮುನ್ನಡೆ ಕಾಯ್ದು ಕೊಂಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಎದುರು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಈವರೆಗೆ 60 ಸಾವಿರ ಮತಗಳ ಅಂತರದ ಮುನ್ನಡೆ ಸಾಧಿಸಿದ್ದು ನಳಿನ್ ಕುಮಾರ್ ಕಟೀಲ್ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ. ಈ ನಡುವೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ಆರಂಭಿಸಿದ್ದಾರೆ. ನಗರದ ಕೆಲವೆಡೆ ಈಗಾಗಲೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಅದೇ ರೀತಿ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮುನ್ನಡೆ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿದಿರುವ ಪ್ರಮೋದ್ ಮಧ್ವರಾಜ್ ವಿರುದ್ಧ 40 ಸಾವಿರ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಇರುವ ಎನ್ಐಟಿಕೆ ಕಾಲೇಜು ಆವರಣದಲ್ಲಿ ನಡೆಯುತ್ತಿದೆ. ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ನಿನ್ನೆ ಸಂಜೆ ಆರು ಗಂಟೆಯಿಂದ ಮೇ 24ರ ಸಂಜೆ ಆರು ಗಂಟೆ ತನಕ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮತೆಣಿಕೆ ಕಾರ್ಯಕ್ಕೆ ಒಟ್ಟು 560 ಮತ ಎಣಿಕೆ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಗಿದ ಬಳಿಕ ತಲಾ ಐದು ವಿವಿಪ್ಯಾಟ್ ಗಳ ಪರಿಶೀಲನೆ ಮಾಡಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ ಎಂಟು ಹಾಲ್ಗಳು, 14 ಮತ ಎಣಿಕೆ ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ.
ಮಂಗಳೂರು ವಿಧಾನಸಭಾ ಕ್ಷೇತ್ರ- 15 ಸುತ್ತು, ಬಂಟ್ವಾಳ- 18, ಪುತ್ತೂರು- 16, ಸುಳ್ಯ - 17, ಬೆಳ್ತಂಗಡಿ- 18, ಮೂಡುಬಿದಿರೆ- 16, ಮಂಗಳೂರು ಉತ್ತರ- 18, ಮಂಗಳೂರು ದಕ್ಷಿಣ- 18. ಸುತ್ತು ಮತ ಎಣಿಕೆ ನಡೆಯಲಿದೆ.












Click it and Unblock the Notifications