ಮಂಗಳೂರು; ಜಾತ್ರೆ ಮಾಡಿದ ದೇವಾಲಯದ ವಿರುದ್ಧ ಪ್ರಕರಣ
ಮಂಗಳೂರು, ಏಪ್ರಿಲ್ 20; ಸರ್ಕಾರದ ಆದೇಶ ಉಲ್ಲಂಘಿಸಿ ದೇವಾಲಯದ ಜಾತ್ರೋತ್ಸವ ಮಾಡಿದ ಹಿನ್ನೆಲೆಯಲ್ಲಿ ಸೋಮೇಶ್ವರ ಸೋಮನಾಥ ದೇವಾಲಯದ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರ ಹೊರವಲಯದ ಉಳ್ಳಾಲದ ಸೋಮೇಶ್ವರ ಸೋಮನಾಥ ದೇವಾಲಯ ಇದಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಮತ್ತು ಸದಸ್ಯರ ವಿರುದ್ದ ಪ್ರಕರಣ ದಾಖಲಾಗಿದೆ.
ಸದ್ಯ, ಸೋಮನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಸಂಭ್ರಮ ನಡೆಯುತ್ತಿದ್ದು ಏಪ್ರಿಲ್ ಅಂತ್ಯದವರೆಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಬೇಕಿತ್ತು. ಹೀಗಾಗಿ ಸೋಮವಾರ ದೇವಾಲಯದ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾವಿರಾರು ಜನರು ಭಾಗಿಯಾಗಿದ್ದರು. ಮೂರು ದಿನಗಳ ಹಿಂದೆಯೇ ದೇವಸ್ಥಾನಕ್ಕೆ ಮಂಗಳೂರು ತಹಶೀಲ್ದಾರ್ ನೋಟಿಸ್ ನೀಡಿದ್ದು ಸರ್ಕಾರದ ಆದೇಶದನ್ವಯ ಕಾರ್ಯಕ್ರಮಗಳನ್ನು, ಜನ ಸೇರುವಂತಹ ಕಾರ್ಯಕ್ರಮ ನಡೆಸದಂತೆ ಎಚ್ಚರಿಕೆ ನೀಡಿದ್ದರು.
ಅಧಿಕಾರಿಗಳ ಎಚ್ಚರಿಕೆಯ ನಡುವೆಯೂ ಆಡಳಿತ ಮಂಡಳಿ ಕಾರ್ಯಕ್ರಮ ಮಾಡಿದ್ದು, ಈ ಹಿನ್ನಲೆಯಲ್ಲಿ ಅಧಿಕಾರಿಗಳು ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ, ಐಪಿಸಿ ಸೆಕ್ಷನ್ 269ರಡಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಏಪ್ರಿಲ್ನಲ್ಲಿ ಸೋಮೇಶ್ವರ ಸೋಮನಾಥೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಬೇಕಿತ್ತು.
ಆದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಒಂದು ವರ್ಷಗಳ ಕಾಲ ಮುಂದೂಡಲ್ಪಟ್ಟಿತ್ತು. ಈ ಬಾರಿಯೂ ಸೋಮನಾಥೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಿಗದಿಯಾದಗಲೇ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ಆಡಳಿತ ಮಂಡಳಿ ಮತ್ತು ಸದಸ್ಯರಿಗೆ ಪ್ರಕರಣ ಎದುರಿಸುವಂತಾಗಿದೆ.












Click it and Unblock the Notifications