ಇಂದಿನಿಂದ (ಏ.1) 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಆರಂಭ
ಮಂಗಳೂರು, ಏಪ್ರಿಲ್ 1: "ರಾಜ್ಯಾದ್ಯಂತ ಇಂದಿನಿಂದ (ಏ.1) ರಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜನರು ಸ್ವಯಂಪ್ರೇರಿತರಾಗಿ ಬದು ಲಸಿಕೆ ಹಾಕಿಸಿಕೊಳ್ಳಬೇಕು" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭೆ ಮಾಡಿದ ನಂತರ ಮಾತನಾಡಿದ ಅವರು, "ಈಗಾಗಲೇ 3 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಹೊಸದಾಗಿ 2 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ಸಿಗಲಿದೆ" ಎಂದು ಮಾಹಿತಿ ನೀಡಿದರು.
ಒಂದು ಕೇಂದ್ರದಲ್ಲಿ 100 ಮಂದಿ ಲಸಿಕೆ ಪಡೆದರೆ 5 ಲಕ್ಷ, ಅಥವಾ 50 ಮಂದಿ ಲಸಿಕೆ ಪಡೆದರೆ, ಎರಡೂವರೆ ಲಕ್ಷ ಜನರಿಗೆ ಲಸಿಕೆ ನೀಡಬಹುದು. ಹೀಗಾಗಿ ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಲು ಬರಬೇಕು ಎಂದು ಮನವಿ ಮಾಡಿದರು.

ಪಕ್ಕದ ಕೇರಳ ರಾಜ್ಯಕ್ಕೂ ದಕ್ಷಿಣ ಕನ್ನಡಕ್ಕೂ ಅವಿನಾಭಾವ ಸಂಬಂಧ. ಈ ಎರಡು ಪ್ರದೇಶಗಳ ನಡುವೆ ಹೆಚ್ಚು ಜನರು ಸಂಚರಿಸುತ್ತಾರೆ. ಆರ್.ಟಿ-ಪಿಸಿಆರ್ ನೆಗೆಟಿವ್ ವರದಿ ಪರೀಕ್ಷಿಸಬೇಕು ಎಂಬ ಮಾರ್ಗಸೂಚಿ ನಿಯಮವೂ ಇದೆ. ಬಿಗಿಯಾದ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡುತ್ತೇನೆ ಎಂದರು.
ಹೆಚ್ಚು ಸೋಂಕಿತ ಪ್ರಕರಣಗಳು ಕಂಡುಬರುತ್ತಿಲ್ಲ, ಆದರೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ. ಗಡಿಭಾಗ ಆಗಿರುವುದರಿಂದ ಎಚ್ಚರಕೆಯಿಂದಿರಬೇಕು. ಕೋವಿಡ್ ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಬೇಕು. ದ.ಕ ಜಿಲ್ಲೆಯ ಆರೋಗ್ಯ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆದು ಬೇರೆಯವರಿಗೆ ಸ್ಫೂರ್ತಿ ನೀಡಬೇಕು ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ನಡೆಯುತ್ತಿದೆ. ಇನ್ನಷ್ಟು ಕಾರ್ಯ ಚುರುಕು ಆಗಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಜನಸಾಮಾನ್ಯರಿಗೆ ಸೇವೆ ದೊರೆಯುವಂತೆ ಮಾಡಬೇಕಿದೆ. ತಜ್ಞ ವೈದ್ಯರು ತಮ್ಮ ಕ್ಷೇತ್ರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಹೆಚ್ಚಿಸಬೇಕೆಂದು ಸೂಚಿಸಿದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಶೇ.40 ರಷ್ಟು ಪ್ರಗತಿಯಾಗಿದೆ. ಇನ್ನೂ ಶೇ.60 ಗುರಿಯನ್ನು ತಲುಪಬೇಕಿದೆ. ಜಿಲ್ಲೆಯ ಎಲ್ಲ ಪಿ.ಎಚ್.ಸಿಗಳಲ್ಲಿ ಕಾಂಪೌಂಡ್, ಕೈತೋಟವನ್ನು ಗ್ರಾಮ ಪಂಚಾಯತಿ ಯೋಜನೆಗಳಡಿ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ












Click it and Unblock the Notifications