ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಆರೋಪಿಗಳನ್ನು ದೋಷಮುಕ್ತಗೊಳಿಸಿದ ಹೈಕೋರ್ಟ್
ಮಂಗಳೂರು, ಆಗಸ್ಟ್ 29: ಐಸಿಸಿ ವಿಶ್ವಕಪ್ ಸಂದರ್ಭದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ ಮೂವರು ಆರೋಪಿಗಳನ್ನು ಹೈಕೋರ್ಟ್ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
2019ರ ಜೂನ್ 24ರಂದು ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಕರುಣಾಕರ (47), ಕುಲಶೇಖರ ನಿವಾಸಿ ಉದಯ್ (40), ಪಾಂಡೇಶ್ವರ ನಿವಾಸಿ ರವಿರಾಜ್ (35) ಎಂಬುವರನ್ನು ಬಂಧಿಸಿದ್ದರು.
ಸೈನಿಕರ ಹೆಸರಿನಲ್ಲಿ ನಡೆಯುತ್ತಿದೆ ಬೃಹತ್ ವಂಚನೆ ಜಾಲ
ಬಂಧಿತರಿಂದ 51.73 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿತ್ತು. ನಂತರ ಪೊಲೀಸರು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ನ ಏಕಸದಸ್ಯ ಪೀಠ, ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಸೂಕ್ತ ಸಾಕ್ಷಾಧಾರ ಒದಗಿಸುವಲ್ಲಿ ವಿಫಲರಾದ ಕಾರಣ ಅರೋಪಿಗಳನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ ಎಂದು ಹೇಳಲಾಗಿದೆ. ಅದಲ್ಲದೇ ಅರ್ಜಿದಾರರ ವಿರುದ್ಧ ದಾಖಲಾದ ದೂರು ರದ್ದುಗೊಳಿಸಲು ಹಾಗೂ ಪೊಲೀಸರು ವಶಪಡಿಸಿಕೊಂಡಿರುವ 51.73 ಲಕ್ಷ ರೂಪಾಯಿ ನಗದನ್ನು ಹಿಂದಿರುಗಿಸಲು ಆದೇಶಿಸಿದೆ.