ತೌಖ್ತೆ ಚಂಡಮಾರುತ; ಮೇ 14ರಿಂದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಮಂಗಳೂರು, ಮೇ 14: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಬ್ಬರದ ಭೀತಿ ಎದುರಾಗಿದೆ. ಮೇ 14 ರಿಂದ ಮೇ 16ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮೇ 17 ಮತ್ತು 18 ರಂದು ಆರೆಂಜ್ ಅಲರ್ಟ್ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರೆಡ್ ಅಲರ್ಟ್ ವೇಳೆಯಲ್ಲಿ ಕರಾವಳಿಯಲ್ಲಿ ಭಾರೀ ಗಾಳಿ, ಸಿಡಿಲು-ಮಿಂಚು ಸಹಿತ ಅತ್ಯಧಿಕ ಮಳೆಯಾಗಲಿದ್ದು, ಮಳೆಯ ಪ್ರಮಾಣ 204.5 ಮಿ.ಮೀಗೂ ಅಧಿಕ ಇರಲಿದೆ ಎಂಬ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಮೇ 14ರ ಸಂಜೆಯಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮಾರುತಗಳು ಬಲ ಪಡೆದುಕೊಂಡು ಕರಾವಳಿಗೆ ಅಪ್ಪಳಿಸಲಿದ್ದು, ಮೇ 15 ಮತ್ತು ಮೇ 16 ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದರೆ ತಕ್ಷಣ ಜಿಲ್ಲಾಡಳಿತಕ್ಕೆ ಸೂಚಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚಿಸಿದೆ. ಈ ಸಂಬಂಧ ಕಟ್ರೋಲ್ ರೂಂ ತೆರೆದಿದ್ದು, ತುರ್ತು ಸಂದರ್ಭದಲ್ಲಿ ಜನ 1077 ಅಥವಾ 9483908000 ನಂಬರ್ ಗೆ ಸಂಪರ್ಕ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ.
ಅಲ್ಲದೆ, ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲೇ ಇರಬೇಕು. ಸಾರ್ವಜನಿಕರು ಸಮುದ್ರ, ನದಿ ಹಾಗೂ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ.
ಚಂಡಮಾರುತದ ಪ್ರಭಾವದಿಂದ ಕಾಸರಗೋಡು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಚಾಮರಾಜನಗರದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಗದಗ, ಉಡುಪಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.