ಜೆಡಿಎಸ್ ಹಿರಿಯ ನಾಯಕರ ಕೈ ಸೇರಿದ ದ.ಕ.ಆಕಾಂಕ್ಷಿಗಳ ಪಟ್ಟಿ
ಮಂಗಳೂರು, ಮಾರ್ಚ್ 12: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನೇರ ಹಣಾಹಣಿ ಇರುವುದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ. ಕಳೆದ 30 ವರ್ಷಗಳಿಂದಲೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರ ಕೋಟೆ. ಈ ಕೋಟೆಯನ್ನು ವಶಪಡಿಸಿಕೊಳ್ಳಲು 'ಕೈ' ಪ್ರಯತ್ನ ನಡೆಸುತ್ತಲೇ ಇದೆ.
ಈ ನಡುವೆ ಜೆಡಿಎಸ್ ಕೂಡ ಕ್ಷೇತ್ರದಲ್ಲಿ ಬಲಿಷ್ಟ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ.ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ನಿಂದ 4 ಮಂದಿ ಆಕಾಂಕ್ಷಿಗಳ ಪಟ್ಟಿಯನ್ನು ಪಕ್ಷದ ಹಿರಿಯ ನಾಯಕರಿಗೆ ಕಳುಹಿಸಿಕೊಟ್ಟಿದೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಕುಂಞಿ, ಪಕ್ಷದ ಹಿರಿಯರ ಕೋರಿಕೆಯಂತೆ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಭೋಜೇಗೌಡ, ಪಕ್ಷದ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ, ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ಅವರ ಹೆಸರನ್ನು ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.

ಈ ಕುರಿತು ಅಂತಿಮ ತೀರ್ಮಾನ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ವಿಶ್ವನಾಥ್ ಅವರು ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು .
ಒಂದು ವೇಳೆ ಹೈಕಮಾಂಡ್ ಈ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟರೆ ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ತಿಳಿಸಿದ ಮುಹಮ್ಮದ್ ಜಿಲ್ಲೆಯಲ್ಲಿ ಪಕ್ಷದ ಬಲ ಕಡಿಮೆಯಿದೆ. ಆದರೆ, ಮೈತ್ರಿ ಸರಕಾರ ಬಂದ ಬಳಿಕ ಜೆಡಿಎಸ್ ಪಕ್ಷದತ್ತ ಕಾರ್ಯಕರ್ತರಲ್ಲಿ ಉತ್ಸಾಹ ಹಚ್ಚಿದೆ. ಹಾಗಾಗಿ ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.












Click it and Unblock the Notifications