ದಕ್ಷಿಣ ಕನ್ನಡ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ
ಮಂಗಳೂರು, ಜನವರಿ 21 : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿಯಾಗಿ ಡಾ.ರವಿಕಾಂತೇ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ರವಿಕಾಂತೇ ಗೌಡ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದಕ್ಷಿಣ ಕನ್ನಡ ಎಸ್ಪಿಯಾಗಿ ನೇಮಿಸಲಾಗಿದೆ. ಸುಧೀರ್ ಕುಮಾರ್ ರೆಡ್ಡಿ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ.
ಬಂಟ್ವಾಳದ ಕಲ್ಲಡ್ಕದಲ್ಲಿ ಚೂರಿ ಇರಿತ ಪ್ರಕರಣ ನಡೆದ ಸಂದರ್ಭದಲ್ಲಿ ಆಗಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ರಾವ್ ಬೊರಸೆ ಅವರನ್ನು ತನ್ನ ಕಾರ್ಯಕರ್ತರ ಮುಂದೆ ನಿಲ್ಲಿಸಿ ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ಸೇರಿದಂತೆ ಇನ್ನಿತರ ಹಿಂದೂ ಸಂಘಟನೆಯ ಮುಖಂಡರನ್ನು ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆದೇಶ ನೀಡಿದ್ದ ವಿಡಿಯೋ ವೈರಲ್ ಆಗಿತ್ತು.

ನಂತರ ಬಂಟ್ವಾಳದಲ್ಲಿ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಯಾದ ಸಂದರ್ಭದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಖ್ಯಾತಿ ಪಡೆದಿದ್ದ ಭೂಷಣ ರಾವ್ ಬೊರಸೆಯವರನ್ನು ವರ್ಗಾವಣೆ ಮಾಡಲಾಗಿತ್ತು. ಬಳಿಕ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಿಸಲಾಗಿತ್ತು.
ಅತೀ ಸೂಕ್ಷ್ಮ ಪರಿಸ್ಥಿತಿಯಲ್ಲಿ ಜಿಲ್ಲೆಗ ಆಗಮಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಗಳಿಂದ ಕಾನೂನ ಸುವ್ಯವಸ್ಥೆಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದಿದ್ದರು.
ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಅತ್ಯಂತ ಜಟಿಲ ಪ್ರಕರಣವನ್ನು ಭೇದಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ನಡುವೆ ಜಿಲ್ಲೆಯಲ್ಲಿ ಶಾಂತಿ ಭಂಗಕ್ಕೆ ಕಾರಣವಾಗುತ್ತಿದ್ದ ಅಪರಾಧಿಗಳನ್ನು ಗಡಿಪಾರು ಮಾಡು ಪ್ರಕ್ರಿಯೆ ಆರಂಭಿಸಿದ್ದರು.
ಇದು ಚುನಾವಣೆ ಹೊಸ್ತಿಲಲ್ಲಿ ಕೆಲ ರಾಜಕಾರಣಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವರ ದೂರವಾಣಿ ಕರೆಗಳನ್ನು ಸುಧೀರ್ ಕುಮಾರ್ ರೆಡ್ಡಿ ಸ್ವೀಕರಿಸುತ್ತಿರಲಿಲ್ಲ ಎಂಬ ದೂರು ಕೂಡ ಕೇಳಿಬಂದಿತ್ತು. ಇದರಿಂದಾಗಿ ರಮಾನಾಥ ರೈ ಕುಪಿತರಾಗಿದ್ದರು ಎಂಬ ಮಾಹಿತಿಯೂ ಇದೆ.

ಈ ಹಿನ್ನೆಲೆಯಲ್ಲಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಚುನಾವಣೆ ಹತ್ತಿರವಿರುವಾಗ ಸರ್ಕಾರ ಮತ್ತಷ್ಟು ವರ್ಗಾವಣೆ ಭಾಗ್ಯ ಕರುಣಿಸುವ ಸಾಧ್ಯತೆ ಇದೆ.












Click it and Unblock the Notifications