ರಸ್ತೆ ಕಾಮಗಾರಿಗೆಂದು ತಂದಿದ್ದ ಡಾಂಬರನ್ನು ಕದ್ದ ಖದೀಮರು
ಮಂಗಳೂರು, ಡಿಸೆಂಬರ್ 30 : ರಸ್ತೆ ನಿರ್ಮಾಣಕ್ಕೆ ಬಳಸುವ ಡಾಂಬರನ್ನು ಕಳ್ಳತನ ಮಾಡಿದ ಪ್ರಸಂಗ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಸಜಿಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ನವೆಂಬರ್ ತಿಂಗಳಿನಲ್ಲಿ ಡಾಂಬರ್ ಕಳವು ಮಾಡಿದ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಕ್ವೀನ್ಸ್ ರಸ್ತೆಯ ಬಿಬಿಎಂಪಿ ಕಚೇರಿಯಲ್ಲಿ ಕಳವು
ಬಂಧಿತ ಆರೋಪಿಗಳನ್ನು ಪುತ್ತೂರು ತಾಲೂಕು ನೆಕ್ಕಿಲಾಡಿ ನಿವಾಸಿ ಉಮ್ಮರುಲ್ ಫಾರೂಕ್ (24), ವಿಟ್ಲ ಕಸಬಾ ನಿವಾಸಿ ಮಹಮ್ಮದ್ ಅಶ್ರಫ್ (24) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 43 ಬ್ಯಾರೆಲ್ ಡಾಂಬರ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತರಿಂದ ವಶಪಡಿಸಿಕೊಳ್ಳಲಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 3 ಲಕ್ಷ ರೂಪಾಯಿ. ಈ ಪ್ರಕರಣದಲ್ಲಿ ಡಾಂಬರ್ ಕದಿಯಲು ಉಪಯೋಗಿಸಿದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ 3 ಜನ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೂ ಪೊಲೀಸರು ಪ್ರಯತ್ನ ಮುಂದುವರೆಸಿದ್ದಾರೆ.