ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಿದ್ದ ದೇವಸ್ಥಾನಗಳಿಗೆ ದ.ಕ ಜಿಲ್ಲಾಧಿಕಾರಿ ನೋಟಿಸ್
ಮಂಗಳೂರು, ಜೂನ್ 19: ಲಾಕ್ ಡೌನ್ ಇದ್ದರೂ ಜಿಲ್ಲೆಯ ಕೆಲ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ನೋಟಿಸ್ ನೀಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕೆಲ ದೇವಸ್ಥಾನಗಳಿಗೆ ನೋಟಿಸ್ ನೀಡಿದ್ದು, ಕಡ್ಡಾಯವಾಗಿ ದರ್ಶನ ವ್ಯವಸ್ಥೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಅಲ್ಲದೆ ಬೇರೆ ಜಿಲ್ಲೆಗಳಿಂದ ಬರುವ ಭಕ್ತರ ವಾಹನ ಸೀಜ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಧರ್ಮಸ್ಥಳ, ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಗಳಲ್ಲಿ ಅಲ್ಲಲ್ಲಿ ಬ್ಯಾರಿಕೇಡ್ ಹಾಕಲು ಆದೇಶಿಸಿದ್ದಾರೆ.

ಪೆರಿಯಶಾಂತಿ, ಚಾರ್ಮಾಡಿ, ಉಜಿರೆ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ಕಠಿಣಗೊಳಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ದ.ಕ ಜಿಲ್ಲೆ ಅನ್ ಲಾಕ್ ಬಗ್ಗೆ ಈಗಲೇ ರೂಪುರೇಷೆ ತಯಾರು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗಗಳಲ್ಲಿ ಪೊಲೀಸರು ನಾಕಾಬಂಧಿ ಹಾಕಿದ್ದರೂ, ಪ್ರವಾಸಿಗರು ಮಾತ್ರ ಜಿಲ್ಲೆಯತ್ತ ಬರುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿಯ ದರ್ಶನಕ್ಕೂ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಕ್ಕೂ ಹೆಚ್ಚು ಭಕ್ತರು ಪ್ರತಿದಿನ ಕ್ಷೇತ್ರದತ್ತ ಆಗಮಿಸುತ್ತಿದ್ದಾರೆ. ರಾಜ್ಯ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಇತರ ದೇವಸ್ಥಾನಗಳಲ್ಲಿ ಭಕ್ತರಿಗೆ ಸರ್ಕಾರ ಇನ್ನೂ ಅವಕಾಶ ನೀಡಿಲ್ಲ.











Click it and Unblock the Notifications