ಮಂಗಳೂರಿನಲ್ಲಿ ಚಿಕಿತ್ಸೆ ಸಿಗದೆ ಮಗು ಸತ್ತ ಪ್ರಕರಣ; ತನಿಖೆಗೆ ಡಿಸಿ ಆದೇಶ
ಮಂಗಳೂರು, ಮೇ 29: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಗರ್ಭದಲ್ಲೇ ಮಗು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗೆ ಸಮಿತಿ ರಚಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸ್ನೇಹಲ್ ಅವರ ಅಧ್ಯಕ್ಷತೆಯಲ್ಲಿ ಒಂಬತ್ತು ಮಂದಿಯ ವಿಚಾರಣಾ ಸಮಿತಿಯನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಸತ್ಯಾಸತ್ಯತೆಯ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಯ್ಯೋ ಪಾಪ.. ಮಂಗಳೂರಿನಲ್ಲಿ ಗರ್ಭಿಣಿಗೆ ಇಂದೆಂಥಾ ದುಃಸ್ಥಿತಿ.!
ಮೇ 12ರಂದು ಈ ಗರ್ಭಿಣಿ ದುಬೈನಿಂದ ಬಂದಿದ್ದರು. ವಿದೇಶದಿಂದ ಬಂದ ಹಿನ್ನೆಲೆ ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಕ್ವಾರಂಟೈನ್ ನಲ್ಲಿದ್ದ ವೇಳೆ ಅವರ ವರದಿ ನೆಗೆಟಿವ್ ಬಂದಿದೆ. ಈ ಕಾರಣದಿಂದ ಅಪಾರ್ಟ್ ಮೆಂಟ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಗರ್ಭಿಣಿ ಬಯಸಿದ್ದರು. ಆದರೆ ಅದಕ್ಕೆ ಅವಕಾಶ ಸಿಕ್ಕಿರಲಿಲ್ಲ. ಈ ಕಾರಣದಿಂದಾಗಿ ಲಾಡ್ಜ್ ನಲ್ಲೇ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಸಾವಿಗೀಡಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಹಲವು ದೂರುಗಳು ಬಂದ ಹಿನ್ನೆಲೆ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.