ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಭಕ್ತಾದಿಗಳಿಗೆ ಸಿಹಿಸುದ್ದಿ
ಮಂಗಳೂರು, ಸೆಪ್ಟೆಂಬರ್ 19 ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ದರ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಒಂದೊಂದೇ ನಿರ್ಬಂಧಗಳನ್ನು ತೆರವು ಮಾಡುತ್ತಿದೆ.
ದೇವಸ್ಥಾನಗಳಲ್ಲಿ ಇದ್ದ ನಿರ್ಬಂಧಗಳನ್ನು ಜಿಲ್ಲಾಡಳಿತ ಇನ್ನಷ್ಟು ಸಡಿಲಿಕೆ ಮಾಡಿದ್ದು, ವಾರಾಂತ್ಯದಲ್ಲೂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ನಡೆಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಆದೇಶ ಹೊರಡಿಸಿದ್ದು, ಹಲವು ನಿಯಮಗಳನ್ನು ಅನ್ವಯಿಸಿ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಡಳಿತ
ಹಲವು ಷರತ್ತುಗಳೊಂದಿಗೆ ವಾರಾಂತ್ಯದಲ್ಲೂ ದೇವಸ್ಥಾನ ತೆರೆಯಲು ಅವಕಾಶ ನೀಡಲಾಗಿದೆ. ದೇವಾಲಯಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದೇವಳದ ಆಡಳಿತ ಮಂಡಳಿಯು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.
ದೇವಾಲಯ ತೆರವು; ಅಧಿಕಾರಿಗಳ ವಿರುದ್ಧ ಮತ್ತೆ ಪ್ರತಾಪ್ ಸಿಂಹ ಗುಡುಗು
ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವರ್ಗದವರು ಪ್ರತಿ 15 ದಿನಗಳಿಗೊಮ್ಮೆ ಕೋವಿಡ್ ಆರ್. ಟಿ. ಪಿ. ಸಿ. ಆರ್. ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು ಜಿಲ್ಲಾಡಳಿತದ ಹೊಸ ಮಾರ್ಗಸೂಚಿ ಹೇಳಿದೆ.
ಇನ್ನು ದೇವಾಲಯಗಳಲ್ಲಿ ವಿವಿಧ ಸೇವೆ ಸಲ್ಲಿಸಲು ಬರುವ ಭಕ್ತರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಸಹ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತವಾಗಿ ಆರ್. ಟಿ. ಪಿ. ಸಿ. ಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದೆ. ದೇವಸ್ಥಾನದ ಆಡಳಿತ ಮಂಡಳಿ ಅಂತಹವರಿಗೆ ಮಾತ್ರ ಸೇವೆಗೆ ಅವಕಾಶ ನೀಡಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ.
ದಕ್ಷಿಣ ಕನ್ನಡದ ಕುಗ್ರಾಮದಲ್ಲಿ ಫಲನೀಡಿದ 30 ದೇಶದ ನೂರಾರು ಹಣ್ಣುಗಳು!
ದೇವಾಲಯಗಳಿಗೆ ಬರುವ ಭಕ್ತರಿಗೆ ಕೋವಿಡ್ ಲಸಿಕೆಯನ್ನು ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿಯನ್ನು ಮೂಡಿಸುವ ಸಲುವಾಗಿ ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ ಮತ್ತು ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ, ಅಂತವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಚರ್ಚಿಸಿ ದೇವಾಲಯಗಳಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ.
ಇನ್ನು ದೇವಸ್ಥಾನದಲ್ಲಿ ನಡೆಯುವ ಪ್ರಮುಖ ವಿಶೇಷ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸೇವೆಗಳನ್ನು ಆದಷ್ಟು ಮಿತಿಗೊಳಿಸುವುದು ಸೂಚಿಸಲಾಗಿದೆ ಹಾಗೂ ಜನಸಂದಣಿಯಾಗದಂತೆ ದಿನವೊಂದಕ್ಕೆ ದೇವಳದ ಸ್ಥಳ, ಸಾಮರ್ಥ್ಯವನ್ನು ನೋಡಿಕೊಂಡು ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಒಟ್ಟಿನಲ್ಲಿ ವಾರಾಂತ್ಯದಲ್ಲಿ ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ಸೇವೆಗಳನ್ನು ಸಲ್ಲಿಸಲು ಅವಕಾಶ ನೀಡಬೇಕೆಂಬ ಭಕ್ತರ ಮನವಿಗೆ ಜಿಲ್ಲಾಡಳಿತ ಕೊನೆಗೂ ಒಪ್ಪಿಗೆ ನೀಡಿದೆ. ಈ ಮೂಲಕ ಮಂಜುನಾಥ ಮತ್ತು ಸುಬ್ರಹ್ಮಣ್ಯನ ಮೇಲಿದ್ದ ವಾರಾಂತ್ಯದ ನಿರ್ಬಂಧ ಕಳಚಿಕೊಂಡಿದೆ.
ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳು ಹೆಚ್ಚಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕೆ ವಹಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲೆಯ ದೇವಾಲಯಗಳಿಗೆ ಭೇಟಿ ನೀಡಲು ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿತ್ತು. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯಕ್ಕೆ ವಾರಾಂತ್ಯದಲ್ಲಿ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳನ್ನು ಮಾಡಿಸುತ್ತಾರೆ.
ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 133 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 113093. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1264. ಇದುವರೆಗೂ ಜಿಲ್ಲೆಯಲ್ಲಿ 1623 ಜನರು ಮೃತಪಟ್ಟಿದ್ದಾರೆ.