ವಿಡಿಯೋ: ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದ ನಲಪಾಡ್!
ಮಂಗಳೂರು, ಜುಲೈ 7: ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಮುಸುಕಿನ ಗುದ್ದಾಟ ನಡೆಯುತ್ತಿರುವಾಗಲೇ, ರಾಜ್ಯ ಯುವ ಕಾಂಗ್ರೆಸ್ನ ಭಾವೀ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮಾತ್ರ ಬಹಿರಂಗವಾಗಿಯೇ ಕಾಂಗ್ರೆಸ್ನ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಬಹಿರಂಗವಾಗಿಯೇ ಘೋಷಿಸಿದ್ದಾರೆ.
ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಮೊಹಮ್ಮದ್ ನಲಪಾಡ್, ಯುವ ಕಾರ್ಯಕರ್ತರೊಂದಿಗೆ ಮಲ್ಪೆ ಮೀನುಗಾರಿಕಾ ಕೇಂದ್ರಕ್ಕೆ ಭೇಟಿ ನೀಡಿ, ಮೀನುಗಾರ ಮಹಿಳೆಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ರಾಜಕೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೀನುಗಾರ ಮಹಿಳೆಯರನ್ನು ಸಮಾಧಾನ ಪಡಿಸಿದ ನಲಪಾಡ್, "ಕಾಂಗ್ರೆಸ್ ನಿಮ್ಮೆಲ್ಲಾ ಸಮಸ್ಯೆಗಳನ್ನು ಪರಿಹಾರ ಮಾಡುತ್ತದೆ. ಎರಡು ವರ್ಷದ ಬಳಿಕ ಬರುವ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಿದರೆ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ,'' ಎಂದು ನಲಪಾಡ್ ಹೇಳಿದ್ದಾರೆ. ನಲಪಾಡ್ ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಕಾಂಗ್ರೆಸ್ನಿಂದ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆಗಳು ಈಗಾಗಲೇ ಕಾಂಗ್ರೆಸ್ನಲ್ಲಿ ಓಡಾಡುತ್ತಿದ್ದವು. ಶಾಸಕ ಜಮೀರ್ ಅಹ್ಮದ್ ಆರಂಭಿಸಿದ್ದ ಈ ಹೇಳಿಕೆಗೆ ಪಕ್ಷದಲ್ಲಿಯೇ ಪರ- ವಿರೋಧ ಚರ್ಚೆಗಳು ನಡೆದವು.
ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಹೇಳಿಕೆ ನೀಡುವವರಿಗೆ ನೋಟಿಸ್ ಜಾರಿ ಮಾಡಿ, ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದರು. ಚುನಾವಣೆ ಮುಗಿಯುವವರೆಗೂ ಮುಂದಿನ ಸಿಎಂ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್ ಕಡೆಯಿಂದಲೇ ಹೇಳಿಸಿದ್ದರು. ಕಾಂಗ್ರೆಸ್ನಲ್ಲಿ ಅಲ್ಪವಿರಾಮ ಬಿದ್ದಿತ್ತು. ಆದರೆ ಡಿ.ಕೆ. ಶಿವಕುಮಾರ್ ಜೊತೆ ಗುರುತಿಸಿಕೊಂಡಿರುವ ಯೂತ್ ಕಾಂಗ್ರೆಸ್ನ ಮುಂದಿನ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮುಂದಿನ ಸಿಎಂ ಡಿಕೆಶಿ ಎಂದು ಹೇಳಿ ಬಿರುಗಾಳಿ ಎಬ್ಬಿಸಿದ್ದಾರೆ.