ಮಂಗಳೂರಿಗೆ ಅಪ್ಪಳಿಸಿರುವುದು ಮುಂಗಾರು ಮಳೆ, ಆತಂಕ ಬೇಡ: ಶಶಿಕಾಂತ್ ಸೆಂಥಿಲ್
ಮಂಗಳೂರು, ಮೇ 29 : ಮೇಘ ಸ್ಪೋಟಕ್ಕೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದೆ. ಈ ನಡುವೆ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಮುಂಗಾರು ಮಳೆಯಾಗಿದ್ದು, ಮೆಕ್ನು ಚಂಡಮಾರುತ ಪರಿಣಾಮದಿಂದ ಉಂಟಾದ ಮಳೆಯಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ಮಳೆ ನೀರು ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಸಾರ್ವಜನಿಕರ ಜನಜೀವನಕ್ಕೆ ತುಂಬಾ ತೊಂದರೆಯಾಗಿದ್ದು, ಈ ಪ್ರದೇಶಗಳಲ್ಲಿ ತುರ್ತು ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು. ಸಾರ್ವಜನಿಕರು ಮಳೆಯಿಂದ ಯಾವುದೇ ಹಾನಿ ಅಥವಾ ಸಮಸ್ಯೆ ಉಂಟಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಕಂಟ್ರೋಲ್ ರೂಂ ಸಂಖ್ಯೆ 1077 ಇದಕ್ಕೆ ಕರೆ ಮಾಡಿ ತಮ್ಮ ಸಮಸ್ಯೆ ತಿಳಿಸಿದರೆ ಕೂಡಲೇ ಸ್ಪಂದಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮೀನುಗಾರರು ಯಾವೂದೇ ಕಾರಣಕ್ಕೂ ಸಮುದ್ರಕ್ಕಿಳಿಯಬಾರದು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ. ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ನದಿ ತೀರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು, ಸಮುದ್ರ ತೀರಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರು ತೆರಳಬಾರದು ಎಂದು ಎಚ್ಚರಿಕಾ ಸಂದೇಶ ಹೊರಡಿಸಲಾಗಿದೆ.
ಈ ನಡುವೆ ಮಳೆ ಭಾದಿತ ಪ್ರದೇಶಗಳಿಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಸದ ನಳೀನ್ ಕಿಮಾರ್ ಕಟೀಲ್ ಮಂಗಳೂರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಜನರು ಯಾವುದೇ ಭಯ ಭೀತರಾಗುವ ಅಗತ್ಯವಿಲ್ಲ..ಯಾವುದೇ ಸಹಾಯಬೇಕಾಗಿದ್ದಲ್ಲಿ ಜಿಲ್ಲಾಢಳಿತ ಹಾಗೂ ನಮ್ಮನ್ನು ನೇರವಾಗಿ ಸಂಪರ್ಕಿಸಬಹದುಗಿದೆ ಎಂದು ಹೇಳಿದರು.

ಜಿಲ್ಲಾಡಳಿತ ಈಗಾಗಲೇ ಅಗತ್ಯ ಕ್ರಮ ಗಳನ್ನೂ ಕೈಗೊಂಡಿದೆ. ಸಂಭಾವ್ಯ ಅಪಾಯ ಎದುರಿಸಲು ಸನ್ನದ್ಧವಾಗಿದೆ. ಬಿಜೆಪಿ ಕಚೇರಿಯಲ್ಲೂ ಸಹಾಯವಾಣಿ ಆರಂಭಿಸಲಾಗಿದೆ. ಸಂಘನಿಕೇತನದಲ್ಲಿಯೂ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ವೈದ್ಯರ ತಂಡ ಹಾಗೂ ಆಂಬುಲೆನ್ಸ್ ಕೂಡ ಸೇವೆ ಗೆ ಸಿದ್ಧವಾಗಿದೆ ಎಂದು ಹೇಳಿದರು.












Click it and Unblock the Notifications