ವೈದ್ಯಲೋಕದ ಅದ್ಭುತ; ಯುವತಿಗೆ ಹುಡುಗನ ಕೈಗಳ ಕಸಿ
ಮಂಗಳೂರು, ಅಕ್ಟೋಬರ್ 1: ವೈದ್ಯಕೀಯ ಲೋಕದ ಅದ್ಭುತ ಶಸ್ತ್ರ ಚಿಕಿತ್ಸೆಯೊಂದು ಯಶಸ್ವಿಯಾಗಿದೆ. ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ ಯುವತಿಗೆ ಯುವಕನೋರ್ವನ ಕೈಗಳನ್ನು ವೈದ್ಯರು ಯಶಸ್ವಿಯಾಗಿ ಜೋಡಿಸಿದ್ದಾರೆ.
ಉಡುಪಿಯ ಮಣಿಪಾಲ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತಿದ್ದ 19 ವರ್ಷದ ಎಂಜಿನಿಯರ್ ವಿದ್ಯಾರ್ಥಿನಿ ಕಳೆದ ವರ್ಷ ನಡೆದ ರಸ್ತೆ ಅಪಘಾತವೊಂದರಲ್ಲಿ ತನ್ನ ಎರಡೂ ಕೈಗಳನ್ನು ಕಳೆದುಕೊಂಡಿದ್ದಳು.
ಆದರೆ ಈಗ ಕೇರಳದ ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈದ್ಯರು ಅತಿ ಅಪರೂಪದ ಶಸ್ತ್ರ ಚಿಕಿತ್ಸೆ ನಡೆಸಿ ಯುವತಿಗೆ ಯುವಕನ ತೋಳನ್ನು ಕಸಿ ಮಾಡಿ ಜೋಡಿಸಿದ್ದಾರೆ.
ಪುಣೆಯ ಟಾಟಾ ಮೋಟರ್ಸ್ ಕಂಪೆನಿಯ ಹಿರಿಯ ವ್ಯವಸ್ಥಾಪಕರಾದ ಫಕೀರಗೌಡ ಮತ್ತು ಸುಮಾ ನುಗ್ಗಿಹಳ್ಳಿ ದಂಪತಿಯ ಪುತ್ರಿ ಶ್ರೇಯಾ ಸಿದ್ದನಗೌಡ ಮಣಿಪಾಲ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕೆಮಿಕಲ್ ಎಂಜಿನಿಯರ್ ವ್ಯಾಸಂಗ ಮಾಡುತ್ತಿದ್ದಾರೆ.
ಕಳೆದ ವರ್ಷ ಪುಣೆಯಿಂದ ಮಣಿಪಾಲಕ್ಕೆ ಬಸ್ನಲ್ಲಿ ಬರುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿತ್ತು. ಈ ಸಂದರ್ಭದಲ್ಲಿ ಶ್ರೇಯಾ ಬಸ್ ಕೆಳಗಡೆ ಸಿಲುಕೊಂಡಿದ್ದ ಪರಿಣಾಮ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದರು. ಶ್ರೇಯಾ ಅವರಿಗೆ ಕೈಗಳಿಲ್ಲದ ಜೀವನ ನರಕವಾಗಿ ಪರಿಣಮಿಸಿತ್ತು .
ಕೈಗಳ ದಾನ
ಕೇರಳದ ಎರ್ನಾಕುಲಂನ ರಾಜಗಿರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸಚಿನ್ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಚಿನ್ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ನಡುವೆ ಕೈಗಳ ಜೋಡಣೆ ಶಸ್ತ್ರಚಿಕಿತ್ಸೆ ಕುರಿತು ವೈದ್ಯರು ಸಚಿನ್ ಪೋಷಕರಲ್ಲಿ ತಿಳಿಸಿದ್ದರು. ಇದಕ್ಕೆ ಸ್ಪಂದಿಸಿದ ಸಚಿನ್ ಪೋಷಕರು ಕೈಗಳನ್ನು ದಾನ ಮಾಡಲು ಅನುಮತಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸಚಿನ್ ಅವರ ತೋಳುಗಳನ್ನೇ ಶ್ರೇಯಾಗೆ ಯಶಸ್ವಿಯಾಗಿ ಜೋಡಿಸಲಾಗಿದೆ.
ಶ್ರೇಯಾಳ ದೇಹವು ಕಸಿ ಮಾಡಿದ ಕೈಗಳನ್ನು ಒಪ್ಪಿಕೊಂಡಿದೆ. ಅಷ್ಟೇ ಅಲ್ಲದೆ ಉತ್ತಮ ಚೇತರಿಕೆ ಲಕ್ಷಣಗಳು ಕಂಡುಬರುತ್ತಿವೆ. ಪ್ರಸ್ತುತ ಶ್ರೇಯಾಳ ಬೆರಳುಗಳು, ಮಣಿಕಟ್ಟುಗಳು ಹಾಗೂ ಭುಜಗಳು ಚಲನೆಯಾಗುತ್ತಿವೆ. ಮುಂದಿನ ಒಂದೂವರೆ ವರ್ಷದಲ್ಲಿ ಶ್ರೇಯಾಳ ಕೈಗಳು ಶೇ.85 ರಷ್ಟು ಚಲನೆಯನ್ನು ಕಾಣಬಹುದು ಎಂದು ವೈದ್ಯರು ಹೇಳಿದ್ದಾರೆ.
ವಿಶ್ವದಲ್ಲಿ ಇಂತಹ 9 ಕಸಿಗಳು ನಡೆದಿವೆ. ಆದರೆ, ಇದೇ ಮೊದಲ ಬಾರಿಗೆ ಏಷ್ಯಾದಲ್ಲಿ ಮಾಡಿರುವ ಯಶಸ್ವಿ ಶಸ್ತ್ರಚಿಕಿತ್ಸೆ ಇದಾಗಿದೆ. ಅದರಲ್ಲೂ ಹುಡುಗನ ತೋಳುಗಳನ್ನು ಇದೇ ಪ್ರಥಮ ಬಾರಿಗೆ ಯುವತಿಗೆ ಜೋಡಿಸಲಾಗಿದೆ.
ಡಾ. ಸುಬ್ರಹ್ಮಣ್ಯ ಅಯ್ಯರ್ ನೇತೃತ್ವದಲ್ಲಿ ಸುಮಾರು 20 ವೈದ್ಯರು ಮತ್ತು 16 ಅರವಳಿಕೆ ತಜ್ಞರು ಸೇರಿ ಸುಮಾರು 13 ಗಂಟೆಗಳ ಕಾಲ ಈ ಆಪರೇಷನ್ ಮಾಡಿದ್ದಾರೆ.