ನೀತಿ ಸಂಹಿತೆ ಹೆಸರಲ್ಲಿ ಜನಸಾಮಾನ್ಯರ ಮೇಲೆ ತುರ್ತು ಪರಿಸ್ಥತಿ: ಐವನ್
ಮಂಗಳೂರು ಏಪ್ರಿಲ್ 16 : ಚುನಾವಣಾ ಆಯೋಗದಿಂದ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಂಥ ಆತಂಕದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣಾ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಕೊಳ್ಳುತ್ತಿದ್ದು ಸಾರ್ವಜನಿಕರ ಮೇಲೆ ಚುನಾವಣಾ ನೀತಿ ಸಂಹಿತೆ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಧಿಕಾರಿಗಳು ಕಾನೂನು ಮೀರಿ ವರ್ತಿಸುತ್ತಿದ್ದಾರೆ ಎಂದು ದೂರಿದ ಅವರು, "ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಜಿಲ್ಲೆಯಲ್ಲಿ ರಾಜಕಾರಣಿಗಳು ಮದುವೆಗೆ ಹೋಗುವಂತಿಲ್ಲ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ಕುಟುಂಬದ ಕಾರ್ಯಕ್ರಮ ನಡೆಸುವಂತಿಲ್ಲ. ಎಲ್ಲೆಂದರಲ್ಲಿ ಬಂದು ಅಧಿಕಾರಿಗಳು ಕಾರ್ಯಕ್ರಮಗಳಿಗೆ ತಡೆಯೊಡ್ಡುತ್ತಿದ್ದಾರೆ," ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
"ಚುನಾವಣೆ ಪ್ರಜಾಪ್ರಭುತ್ವದ ಅಂಗ. ಎಲ್ಲರಿಗೂ ಸ್ವಾತಂತ್ರ್ಯ ಇದೆ. ಆದರೆ ಮದುವೆಗಳನ್ನು ಮಾಡಲು ಬಿಡೋದಿಲ್ಲ, ಖಾಸಗಿ ಕಾರ್ಯಕ್ರಮಗಳಲ್ಲಿ ಮದ್ಯ ನೀಡಲೂ ಬಿಡುತ್ತಿಲ್ಲ," ಎಂದು ಆಕ್ರೋಶ ವ್ಯಕ್ತಪಡಿಸಿದರು. "ಚುನಾವಣಾ ಆಯೋಗದ ನಿಯಮಗಳು ಅತಿಯಾಯಿತು. ಇದಕ್ಕೆ ನಿಯಂತ್ರಣ ಬೇಕಾಗಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ," ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಹೇಳಿಕೆ ನೀಡಿದ್ದಾರೆ.