ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ, ಕೃಷಿ ನಾಶ
ಮಂಗಳೂರು, ಜೂನ್ 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಜಿಲ್ಲೆಯ ಕಾಡಂಚಿನ ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆಗಳು ತೋಟಗಳಿಗೆ ಲಗ್ಗೆ ಇಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೊಣಾಜೆ ಗ್ರಾಮದ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿವೆ.
ಇಲ್ಲಿಯ ಸುನಿಲ್ ಜೋಸೆಫ್ ಅವರ ತೋಟಕ್ಕೆ ಮೂರು ದಿನಗಳಿಂದ ಕಾಡಾನೆಗಳು ದಾಳಿ ನಡೆಸುತ್ತಿವೆ.
ಕಾಡಾನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಿಯರ ಮಾಹಿತಿ ಪ್ರಕಾರ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ.

ರಾತ್ರಿ ವೇಳೆ ಕೊಣಾಜೆ, ಕಲ್ಲುಗುಡ್ಡೆ ಪ್ರದೇಶದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಸ್ಥಳೀಯರು ಹಾಗೂ ಅರಣ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ಸುಬ್ರಹ್ಮಣ್ಯ ಸಮೀಪದ ಅರಣ್ಯದಲ್ಲಿ ಗಾಯಗೊಂಡು ಯಾತನೆ ಅನುಭವಿಸುತ್ತಿದ್ದ ಕಾಡಾನೆಯೊಂದು ಸಾವನ್ನಪ್ಪಿತ್ತು. ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಆನೆ, ವೈದ್ಯರು ನೀಡಿದ್ದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿತ್ತು. ಗಾಯಗೊಂಡ ಆನೆ ಅರಣ್ಯ ಪ್ರದೇಶದಲ್ಲಿ ಸಾವನ್ನಪ್ಪಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಈ ವಿಚಾರವನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು.












Click it and Unblock the Notifications