ದಕ್ಷಿಣ ಕನ್ನಡದ ಎಂಡೋ ಪೀಡಿತರಿಗೆ ಉಚಿತ ಚಿಕಿತ್ಸೆ
ಮಂಗಳೂರು, ಜೂ.11 : ಎಂಡೋಸಲ್ಫಾನ್ ಪೀಡಿತರಿಗೆ ಉಚಿತವಾಗಿ ಸೂಕ್ತ ಚಿಕಿತ್ಸೆ ನೀಡಲು ದಕ್ಷಿಣ ಕನ್ನಡ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೀಘ್ರದಲ್ಲೇ ಸರ್ಕಾರ ಜಿಲ್ಲೆಯ ಇನ್ನೂ 18 ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್. ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡ ಒಪ್ಪಂದದ ಪತ್ರವನ್ನು ವಿನಿಮಯ ಮಾಡಿಕೊಂಡರು. ಎಂಡೋಸಲ್ಫಾನ್ ಪೀಡಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಮಾದರಿ ಕಾರ್ಯಕ್ರಮ ಹಾಕಿಕೊಂಡಿದ್ದು, ಅದರ ಭಾಗವಾಗಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಮೂಲಕ ಅನಾರೋಗ್ಯ ಪೀಡಿತರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕಾರ್ಯವನ್ನು ಸರ್ಕಾರ ಮಾಡಲಿದೆ ಎಂದು ಖಾದರ್ ಹೇಳಿದರು.
ಮೊದಲ ಹಂತದಲ್ಲಿ ಕೆ.ಎಂ.ಸಿ, ಎ.ಜೆ.ಶ್ರೀನಿವಾಸ್, ಕ್ಷೇಮ, ಫಾದರ್ ಮುಲ್ಲರ್ ಹಾಗೂ ಯೆನಪೋಯ ಮೆಡಿಕಲ್ ಕಾಲೇಜುಗಳು ಹಾಗೂ ಒಮೇಗಾ ಆಸ್ಪತ್ರೆ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಶೀಘ್ರದಲ್ಲೇ ದಕ್ಷಿಣ ಜಿಲ್ಲೆಯ 18 ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರು ಹೇಳಿದರು. ಮತ್ತಷ್ಟು ವಿವರ ಚಿತ್ರಗಳಲ್ಲಿ
ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಪ್ಪಂದ
ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ಉಚಿತವಾಗಿ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಶೀಘ್ರದಲ್ಲೇ ಇನ್ನೂ 18 ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಿಗದಿತ ಸ್ಥಳಗಳಲ್ಲಿ ಚಿಕಿತ್ಸೆ
ಎಂಡೋ ಪೀಡಿತರಿಗೆ ತೆರೆಯಲಾದ ಪಾಲನಾ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆಯಬಹುದು. ಅಲ್ಲಿಗೆ ಬರಲು ಸಾಧ್ಯವಾಗದಿದ್ದರೆ ಸರ್ಕಾರಿ ಆಂಬ್ಯುಲೆನ್ಸ್ ಮೂಲಕ ನಿಗದಿತ ಆಸ್ಪತ್ರೆಗಳಲ್ಲಿ ಬಂದು ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಸಚಿವರು ವಿವರಣೆ ನೀಡಿದರು.
ಸಮಿತಿ ರಚನೆ ಮಾಡಲಾಗಿದೆ
ಎಂಡೋ ಪೀಡಿತರ ಚಿಕಿತ್ಸೆ ಹಾಗೂ ಇನ್ನಿತರ ವಿಷಯದಲ್ಲಿ ಸಮಸ್ಯೆಗಳು ಉಂಟಾದರೆ ಅದನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಯಾವುದೇ ಸಂದೇಹಗಳನ್ನು ಜನರು ಇಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಯು.ಟಿ.ಖಾದರ್ ಹೇಳಿದರು.
ಮನೋ ರೋಗಿಗಳಿಗೆ ಪುನಃಶ್ಚೇತನ ಕೇಂದ್ರ
ರಾಜ್ಯದಲ್ಲಿ ಮನೋರೋಗಿಗಳಿಗೆ ಅನುಕೂಲವಾಗುವಂತೆ ಎಲ್ಲ ಜಿಲ್ಲೆಗಳಲ್ಲಿ ತಲಾ ಒಂದೊಂದು ಪುನಃಶ್ಚೇತನ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಕೇಂದ್ರ ತೆರೆಯಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ದೇರಳಕಟ್ಟೆಯ ಕ್ಷೇಮ ಆಸ್ಪತ್ರೆಯಲ್ಲಿ ಕೇಂದ್ರ ತೆರೆಯಲಾಗಿದೆ ಎಂದರು.
ಹೇಗಿರುತ್ತದೆ ಪುನಃಶ್ಚೇತನ ಕೇಂದ್ರ
ಈ ಪುನಃಶ್ಚೇತನ ಕೇಂದ್ರದಲ್ಲಿ 20 ಬೆಡ್ಗಳನ್ನು ಪ್ರತ್ಯೇಕವಾಗಿ ಮನೋ ರೋಗಿಗಳಿಗೆ ಮೀಸಲಿಡುವಂತೆ ಸೂಚನೆ ನೀಡಲಾಗಿದೆ. ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಈ ಕೇಂದ್ರದಲ್ಲಿ ಮಾಡಲಾಗಿದೆ. ಪ್ರತಿ ಕೇಂದ್ರಗಳಿಗೆ ಸರಕಾರ 1.60 ಲಕ್ಷ ರೂ. ವೆಚ್ಚ ಮಾಡಲಿದೆ. ವೈದ್ಯರು ಮತ್ತು ಎಲ್ಲಾ ಸೌಲಭ್ಯಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಖಾದರ್ ಹೇಳಿದರು.