ಕಟ್ಟಡದಿಂದ ಹಾರಿ ಮಂಗಳೂರಿನ ಎನ್ಐಟಿ-ಕೆ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು, ನವೆಂಬರ್ 17 : ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯಾ ಸರಣಿ ಮುಂದುವರೆದಿದೆ. ಪರೀಕ್ಷೆ ಬರೆಯಲು ಅವಕಾಶ ನಿರಕಾರಿಸಿದ್ದಕ್ಕಾಗಿ ಮನನೊಂದು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿ-ಕೆ) ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ರೊಚ್ಚಿಗೆದ್ದಿರುವ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಬಿಟೆಕ್ ತೃತೀಯ ವರ್ಷದ ಮೆಕ್ಯಾನಿಕಲ್ ವಿದ್ಯಾರ್ಥಿ ಮುಂಬೈ ಮೂಲದ ಆನಂದ್ ಪಾಠಕ್ (21) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಸೋಮವಾರದ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಆನಂದ ಪಾಠಕ್ ಗೆ ಕಾಲೇಜಿನ ಉಪನ್ಯಾಸಕರು ಅವಕಾಶ ನಿರಾಕರಿಸಿದ್ದರು. ಅಲ್ಲದೆ, ಈ ವಿಚಾರದಲ್ಲಿ ಶನಿವಾರ ಮಧ್ಯಾಹ್ನ ವಿದ್ಯಾರ್ಥಿಯನ್ನು ಕರೆದು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿ ಆನಂದ್ ಪಾಠಕ್, ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಖಂಡಿಸಿ ನೂರಾರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಾತ್ರಿವರೆಗೂ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿತ ಉಪನ್ಯಾಸಕರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಲೇಜು ಕ್ಯಾಂಪಸ್ ನಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಾಲೇಜಿನ ಆಡಳಿತ ವರ್ಗ ಈ ವಿಚಾರ ಹೊರಬರದಂತೆ ಮುಚ್ಚಿ ಹಾಕಿದೆಯೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಘಟನೆಯ ಕುರಿತು ಮಂಗಳೂರಿನ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.












Click it and Unblock the Notifications