ಉನ್ನತ ಶಿಕ್ಷಣ ಖಾತೆ ಮಾಜಿ ಸಚಿವ ಬಿ.ಎ. ಮೊಹಿದ್ದೀನ್ ನಿಧನ
ಮಂಗಳೂರು, ಜುಲೈ 10: ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ.ಎ ಮೊಹಿದ್ದೀನ್ (81) ಮಂಗಳವಾರ ಮುಂಜಾನೆ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮಂಗಳೂರಿನ ಬಜ್ಪೆಯವರಾದ ಬಿ.ಎ. ಮೊಹಿದ್ದೀನ್, ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ಜನತಾ ಪರಿವಾರದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು.

ದೇವರಾಜ ಅರಸು ಅವರ ನಿಕಟವರ್ತಿಯಾಗಿದ್ದ ಅವರು, 1978ರಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಜನತಾಪರಿವಾರ ಸೇರಿ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು.
ಬಳಿಕ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದ ಅವರು ಎಐಸಿಸಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ವಿಧಾನಪರಿಷತ್ನಲ್ಲಿ ಸುಮಾರು ಹತ್ತು ವರ್ಷ ಸದಸ್ಯರಾಗಿದ್ದರು.
ಮಂಗಳೂರಿನಲ್ಲಿ ಕೈಗಾರಿಕೋದ್ಯಮಿಯೂ ಆಗಿದ್ದ ಅವರು, ಕೆಲವು ದಿನಗಳಿಂದ ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಲ್ಪ ಚೇತರಿಕೆ ಕಂಡು ಬಂದ ಬಳಿಕ ಬೆಂಗಳೂರಿಗೆ ತೆರಳಿ ಚಿಕಿತ್ಸೆಗೆ ಒಳಗಾಗಿದ್ದರು.
ಅವರ ಮೃತದೇಹ ಮಂಗಳವಾರ ಮಧ್ಯಾಹ್ನ ಮಂಗಳೂರಿಗೆ ಬರಲಿದ್ದು, ಅವರ ಹುಟ್ಟೂರು ಬಜ್ಪೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕುಮಾರಸ್ವಾಮಿ ಸಂತಾಪ
ಬಿ.ಎ. ಮೊಹಿದೀನ್ ಅವರ ನಿಧನ ಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದೇವರಾಜ ಅರಸು ಅವರ ಒಡನಾಡಿಯಾಗಿದ್ದ ಮೊಹಿದ್ದೀನ್ ಅವರು ನಂತರದ ವರ್ಷಗಳಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು.
2016 ರಲ್ಲಿ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ನಿಧನದಿಂದ ನಾಡು ಹಿರಿಯ ಮುತ್ಸದ್ಧಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.












Click it and Unblock the Notifications