ಕರಾವಳಿಯಲ್ಲಿ ಜೂ. 23ರವರೆಗೆ ಭಾರೀ ಮಳೆ ಸಾಧ್ಯತೆ
ದಕ್ಷಿಣ ಕನ್ನಡ, ಜೂನ್ 19: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ ಜೂನ್ 23ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Recommended Video
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂನ್ 23ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಐದು ದಿನಗಳಲ್ಲೂ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಮುಂಗಾರು ಚುರುಕು; ಉಳ್ಳಾಲ, ಸೋಮೇಶ್ವರದಲ್ಲಿ ಅಲೆಗಳ ಅಬ್ಬರ
ಬಿರುಗಾಳಿ ಸಮೇತ ಮಳೆ ಸುರಿಯುವ ಸೂಚನೆ ನೀಡಿದ್ದು, ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಕಾಪು ಸಮೀಪದ ಮೂಳೂರಿನಲ್ಲಿ ಭಾರೀ ಗಾತ್ರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುತ್ತಿದ್ದು, ಕಡಲ್ಕೊರೆತದ ಭೀತಿ ಶುರುವಾಗಿದೆ.
ಉಡುಪಿ ಜಿಲ್ಲೆ, ಮಡಿಕೇರಿ, ಕಾರವಾರ, ಮಂಗಳೂರು, ಚಿಕ್ಕಮಗಳೂರು, ಕಲಬುರಗಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯಾಗಿರುವುದಾಗಿ ತಿಳಿದುಬಂದಿದೆ.
ಮಲೆನಾಡಿನಲ್ಲಿ ಸತತ ಮಳೆಯಾಗುತ್ತಿದ್ದು, ಶಿವಮೊಗ್ಗದ ತುಂಗಾ ಜಲಾಶಯ ಭರ್ತಿಯಾಗಿದೆ. ಗುರುವಾರ ನಾಲ್ಕು ಕ್ರೆಸ್ಟ್ ಗೇಟ್ ಗಳ ಮೂಲಕ 2,086 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.