Dharmasthala: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಹೆಚ್.ಡಿ ರೇವಣ್ಣ: ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ
ಮಂಗಳೂರು, ಮೇ 27: ಜೈಲಿನಿಂದ ಹೊರ ಬಂದ ಬಳಿಕ ಮಾಜಿ ಸಚಿವ ಹೆಚ್.ಡಿ ರೇವಣ್ಣ ದೇವಸ್ಥಾನಗಳ ಭೇಟಿ ಮುಂದುವರಿಸಿದ್ದು, ಇಂದು(ಮೇ 27) ಸೋಮವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಕಾನೂನಿನ ಸಂಕಷ್ಟದಲ್ಲಿರುವ ಹೆಚ್.ಡಿ ರೇವಣ್ಣ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಿನ್ನೆ ರಾತ್ರಿಯೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿರುವ ರೇವಣ್ಣ, ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ. ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ರೇವಣ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಇತರ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಜೊತೆ ಹೆಚ್.ಡಿ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.












Click it and Unblock the Notifications