ಪುತ್ತೂರಿನಲ್ಲಿ ಅತ್ಯಾಚಾರ ಪ್ರಕರಣ; ಬೆದರಿಕೆ ಹಾಕಿದ್ದ ಆರೋಪಿಗಳು
ಮಂಗಳೂರು, ಜುಲೈ 4: ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯ ಎಸಗಿದ ಕಾಲೇಜು ವಿದ್ಯಾರ್ಥಿಗಳಾದ ಗುರುನಂದನ್, ಪ್ರಜ್ವಲ್, ಕಿಶನ್, ಸುನಿಲ್ ಹಾಗೂ ಪ್ರಖ್ಯಾತ್ ಬಂಧನಕ್ಕೊಳಗಾದವರು. ಆರೋಪಿಗಳ ಪತ್ತೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದರು.
ಫೆಬ್ರುವರಿ ತಿಂಗಳಿನಲ್ಲಿ ಈ ಘಟನೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ತಮ್ಮ ಕಾಲೇಜಿನ ಸಹಪಾಠಿಯನ್ನೇ ಮಾತನಾಡುವ ಉದ್ದೇಶದಿಂದ ಕಾರಿನಲ್ಲಿ ಕುಳ್ಳಿರಿಸಿ ಅಜ್ಞಾತ ಸ್ಥಳಕ್ಕೆ ಕೊಂಡೊಯ್ದಿದ್ದರು. ನಂತರ ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರ ಕೃತ್ಯವನ್ನು ಮೊಬೈಲ್ ನಲ್ಲಿ ವೀಡಿಯೊ ಮಾಡಿದ್ದಾರೆ. ಈ ವಿಷಯ ತಿಳಿಸಿದರೆ ಕೊಲ್ಲುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದರು. ಈಗ ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಅತ್ಯಾಚಾರ ನಡೆಸಿದ 5 ವಿದ್ಯಾರ್ಥಿಗಳ ವಿರುದ್ಧ ಅತ್ಯಾಚಾರ ಹಾಗೂ ದಲಿತ ದೌರ್ಜನ್ಯ ಪ್ರಕರಣವನ್ನು ದಾಖಲಿಸಿಕೊಂಡಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಆರೋಪಿಗಳ ಪತ್ತೆಗಾಗಿ ನಾಲ್ಕು ಪೊಲೀಸರ ತಂಡ ರಚಿಸಿದ್ದರು. ಘಟನೆಯು ಕಾಲೇಜಿನ ಆವರಣದಲ್ಲಿ ನಡೆಯದ ಕಾರಣ ಕಾಲೇಜಿನ ಆಡಳಿತ ಮಂಡಳಿಗೆ ಈ ವಿಚಾರ ಗಮನಕ್ಕೆ ಬಂದಿಲ್ಲ. ಈ ನಡುವೆ ವಿಡಿಯೋ ವೈರಲ್ ಆದ ಬಳಿಕ ಕಾಲೇಜು ಆಡಳಿತ ಮಂಡಳಿ ಪ್ರಕರಣದಲ್ಲಿ ಭಾಗಿಯಾದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ತೆಗೆದುಹಾಕಿದೆ.

ಅತ್ಯಾಚಾರದ ವಿಡಿಯೋ ಪರಿಶೀಲಿಸಿದಾಗ, ಅತ್ಯಾಚಾರ ನಡೆಸಿದ ವಿದ್ಯಾರ್ಥಿಗಳು ಅಮಲು ಪದಾರ್ಥ ಸೇವಿಸಿರುವ, ಜೊತೆಗೆ ವಿದ್ಯಾರ್ಥಿನಿಗೂ ಅಮಲು ಬರಿಸಿರುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ವಿದ್ಯಾರ್ಥಿನಿ ಅಮಲು ಪದಾರ್ಥ ಸೇವನೆ ವಿಚಾರವನ್ನು ಅಲ್ಲಗಳೆದಿದ್ದಾಳೆ.












Click it and Unblock the Notifications