ಸಚಿವ ಅಭಯಚಂದ್ರ ಜೈನ್ಗೆ ರವಿ ಪೂಜಾರಿಯಿಂದ ಬೆದರಿಕೆ ಕರೆ
ಮಂಗಳೂರು, ಅಕ್ಟೋಬರ್ 26 : ಸಚಿವ ಅಭಯಚಂದ್ರ ಜೈನ್ ಅವರಿಗೆ ಭೂಗತ ಪಾತಕಿ ರವಿ ಪೂಜಾರಿ ಹೆಸರಿನಲ್ಲಿ ಜೀವ ಬೆದರಿಕೆ ಕರೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದೆ.
ಯುವಜನ ಸೇವಾ ಮತ್ತು ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಅವರಿಗೆ ಶನಿವಾರ ಮಧ್ಯಾಹ್ನ 12.45ರ ಸುಮಾರಿಗೆ ಬೇರೆ ದೇಶದ ನಂಬರ್ನಿಂದ ಜೀವ ಬೆದರಿಕೆ ಕರೆ ಬಂದಿದೆ. ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರುಗನ್ ಅವರಿಗೂ ಈ ಕುರಿತು ಮಾಹಿತಿ ರವಾನಿಸಲಾಗಿದೆ. [ಪ್ರಶಾಂತ್ ಪೂಜಾರಿ ಹತ್ಯೆಗೆ ಕಾರಣವೇನು?]

ಶನಿವಾರ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ತನ್ನನ್ನು ರವಿ ಪೂಜಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಕಾರ್ಯಕ್ರಮ ಮುಗಿಸಿ ಬಂದ ಬಳಿಕ ಸಚಿವರು ಈ ಕುರಿತು ದೂರು ನೀಡಿದ್ದಾರೆ. [ಪೂಜಾರಿ ಹತ್ಯೆ : ನಾಲ್ವರ ಬಂಧನ]
'ಭಜರಂಗ ದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆಯಲ್ಲಿ ನೀವು ನೇರವಾಗಿ ಭಾಗಿಯಾಗಿದ್ದೀರಿ. ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ' ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ನಗರ ಪೊಲೀಸ್ ಆಯುಕ್ತ ಎಸ್.ಮುರುಗನ್ ಸಚಿವರ ಮನೆಗೆ ಭೇಟಿ ನೀಡಿ ಈ ಕರೆ ಕುರಿತು ಮಾತುಕತೆ ನಡೆಸಿದ್ದಾರೆ. ಸಚಿವರಿಗೆ ಪೊಲೀಸ್ ಬೆಂಗಾವಲಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. [ಮೂಡಬಿದಿರೆ : ಪ್ರಶಾಂತ್ ಪೂಜಾರಿ ಹತ್ಯೆ]
ಮೂಡಬಿದಿರೆಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಪ್ರಶಾಂತ್ ಪೂಜಾರಿ ಹಿಂದೂಪರ ಸಂಘಟನೆಯಲ್ಲಿ ಸಕ್ರಿಯನಾಗಿ ಗುರುತಿಸಿಕೊಂಡಿದ್ದ. ಅಕ್ಟೋಬರ್ 9ರಂದು ಮೂಡಬಿದಿರೆ ಪೇಟೆಯ ಸಮಾಜಮಂದಿರ ಗೇಟ್ ಬಳಿ ಅವರ ಹತ್ಯೆ ನಡೆದಿತ್ತು. ಇದುವರೆಗೂ 9 ಆರೋಪಿಗಳನ್ನು ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.
ಪ್ರಶಾಂತ್ ಹತ್ಯೆಯನ್ನು ಪ್ರತ್ಯಕ್ಷವಾಗಿ ನೋಡಿದ್ದ ವಾಮನ ಪೂಜಾರಿ ಅವರು ಅಕ್ಟೋಬರ್ 22ರಂದು ಸಾವನ್ನಪ್ಪಿದ್ದರು. ಇವರಿಗೂ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಬಿಜೆಪಿ ಆರೋಪಿಸಿದೆ. ಆದರೆ, ಪೊಲೀಸರು ಇದು ಆತ್ಮಹತ್ಯೆ ಎಂದು ಹೇಳಿದ್ದಾರೆ.












Click it and Unblock the Notifications