ಮೋದಿ ಆಡಳಿತದಲ್ಲಿ ಮಹಿಳೆಯರು, ಮಕ್ಕಳು ಸುರಕ್ಷಿತರಾಗಿಲ್ಲ: ಜಾನೆಟ್ ಡಿಸೋಜಾ
ಮಂಗಳೂರು, ಏಪ್ರಿಲ್ 14: ದೇಶದಾದ್ಯಂತ ಮಹಿಳೆಯರು, ಯುವತಿಯರು ಮತ್ತು ಮಕ್ಕಳು ಅಸುರಕ್ಷಿತರಾಗಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜಾ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಹಾಗು ಕೊಲೆ ಪ್ರಕರಣದಿಂದಾಗಿ ದೇಶವೇ ತಲೆ ತಗ್ಗಿಸುವಂತಾಗಿದೆ. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ದೇಶದಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಯೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಹಿಳೆ ಹಾಗೂ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಕಾನೂನಿನಲ್ಲಿ ತಿದ್ದುಪಡಿ ತಂದು ಮರಣದಂಡನೆ ನೀಡಬೇಕು ಎಂದು ಹೇಳಿದ ಅವರು, ಕತುವಾ ಪ್ರಕರಣದಲ್ಲಿ ಇಷ್ಟು ಗದ್ದಲ ನಡೆದರೂ ಚಕಾರವೆತ್ತದ ಪ್ರಧಾನಿ ಮೋದಿ ಶುಕ್ರವಾರ ಈ ಕುರಿತು ಪ್ರಸ್ತಾಪಿಸಿ ನ್ಯಾಯ ಒದಗಿಸಲಾಗುವುದೆಂದು ಮಾತ್ರ ಹೇಳಿದ್ದಾರೆ. ಮೋದಿ ಅವರು ಮನ್ ಕಿ ಬಾತ್ನಲ್ಲಿ ಆ ಮಗುವಿಗೆ ನ್ಯಾಯ ಒದಗಿಸುವ ಕುರಿತು ಮಾತನಾಡಬಹುದು ಎಂದು ಕಿಡಿಕಾರಿದರು.

ಕತುವಾ ಮತ್ತು ಉನ್ನಾವೊ ಘಟನೆಗಳಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು. ಭಾನುವಾರ ಸಂಜೆ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮಹಿಳಾ ಕಾಂಗ್ರೆಸ್ ವತಿಯಿಂದ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳಾ ಕಾಂಗ್ರೆಸ್ ಘಟಕವನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿ ಪ್ರಚಾರ ನಡೆಸಲಾಗುತ್ತಿದೆ. ಪ್ರತಿ ವಿಭಾಗದಿಂದಲೂ ಕನಿಷ್ಠ 3 ಮಹಿಳೆಯರಿಗೆ ಚುನಾವಣೆಯಲ್ಲಿ ಅವಕಾಶ ನೀಡಬೇಕೆಂದು ಹೈಕಮಾಂಡ್ಗೆ ಬೇಡಿಕೆ ಸಲ್ಲಿಸಿದ್ದೇವೆ. ಶೇ 33 ಅಲ್ಲದಿದ್ದರೂ ಶೇ 22ರಷ್ಟಾದರೂ ಅವಕಾಶಕ್ಕಾಗಿ ಬೇಡಿಕೆಯಿಡಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು .












Click it and Unblock the Notifications