ಎಸಿಬಿ ಬಲೆಗೆ ಬಿದ್ದಿದ್ದ ಗಾಯತ್ರಿ ನಾಯಕ್ ಆಸ್ಪತ್ರೆಗೆ ದಾಖಲು
ಮಂಗಳೂರು, ಜನವರಿ 6 : ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ)ಅಧಿಕಾರಿಗಳ ಬಲೆಗೆ ಬಿದ್ದಿದ್ದ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನಾಧಿಕಾರಿ ಗಾಯತ್ರಿ ಎನ್.ನಾಯಕ್ ಅವರು ಅನಾರೋಗ್ಯದ ಕಾರಣ ನೀಡಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯತ್ರಿ ನಾಯಕ್ ಹಾಗೂ ಕಚೇರಿ ಸಹಾಯಕ ತುಕ್ರಪ್ಪನನ್ನು ಬುಧವಾರ ಸಾಯಂಕಾಲ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವೈದ್ಯರು ಇಬ್ಬರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ನೀಡಿದ್ದರು. ಅದರಂತೆ ನ್ಯಾಯಾಧೀಶರು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಉಪ ಕಾರಾಗೃಹಕ್ಕೆ ಬಿಟ್ಟು ಹೋಗುವವರೆಗೆ ಆರೋಗ್ಯವಾಗಿದ್ದ ಗಾಯತ್ರಿ ನಾಯಕ್ಗೆ ಏಕಾಏಕಿ ಸುಸ್ತು, ತಲೆ ಸುತ್ತು ಕಂಡು ಬಂದಿದೆ. ಈ ವೇಳೆ ಅವರು ಆಸ್ಪತ್ರೆಗೆ ದಾಖಲಿಸುವಂತೆ ಕೋರಿಕೊಂಡಿದ್ದಾರೆ. ಆಕೆಯ ಕೋರಿಕೆಯಂತೆ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿ ಗುರುವಾರ ಬೆಳಗ್ಗೆ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. [ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಭೂಸ್ವಾಧೀನಾಧಿಕಾರಿ ಎಸಿಬಿ ಬಲೆಗೆ]

ಕಾಸರಗೋಡಿನ ಯೋಗೀಶ್ ಎಂಬುವವರು ನೀಡಿದ ದೂರಿನಂತೆ ಎಸಿಬಿ ಅಧಿಕಾರಿಗಳು ಬುಧವಾರ ನಗರದ ಮಿನಿ ವಿಧಾನಸೌಧದ ಬಳಿಯ ವಿಶೇಷ ಭೂಸ್ವಾಧೀನಾಧಿಕಾರಿಯ ಕಚೇರಿಗೆ ದಾಳಿ ಮಾಡಿ ಗಾಯತ್ರಿ ನಾಯಕ್ ಮತ್ತು ಕಚೇರಿ ಸಹಾಯಕ ತುಕ್ರಪ್ಪನನ್ನು ಬಂಧಿಸಿದ್ದರು.
ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಪರಿಹಾರ ಮೊತ್ತ ವಿತರಣೆಗಾಗಿ 25 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಗಾಯತ್ರಿ ನಾಯಕ್ ಹಾಗೂ ತುಕ್ರಪ್ಪ ಎಸಿಬಿ ಬಲೆಗೆ ಬಿದ್ದಿದ್ದರು.












Click it and Unblock the Notifications