ಮಳಲಿ ಮಸೀದಿಯಲ್ಲಿ ದೇವಾಲಯ ಪತ್ತೆ ವಿವಾದಕ್ಕೆ ಹೊಸ ತಿರುವು
ಬೆಂಗಳೂರು, ಜೂ.14: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿದೆ ಎನ್ನಲಾದ ವಿಚಾರಕ್ಕೆ ಸೋಮವಾರ ಹೊಸ ತಿರುವು ಸಿಕ್ಕಿದೆ. ಹೈಕೋರ್ಟ್ ಆ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ಯಾವುದೇ ಆದೇಶ ಹೊರಡಿಸದಂತೆ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಹಾಗಾಗಿ ಮಂಗಳೂರಿನ ನ್ಯಾಯಾಲಯ ವಿಚಾರಣೆ ನಡೆಸಿದರೂ ಯಾವುದೇ ಆದೇಶ ಸಾಧ್ಯವಿಲ್ಲ. ಜೊತೆಗೆ ಆದೇಶ ನೀಡುವ ಮುನ್ನ ಕೋರ್ಟ್ ಕಮೀಷನರ್ ನೇಮಕ ಮಾಡಬೇಕೆಂಬ ಒತ್ತಾಯ ಕೂಡ ಮುನ್ನೆಲೆಗೆ ಬಂದಿದೆ.ಮಂಗಳೂರಿನ ತೆಂಕಳೈಪಡಿ ಗ್ರಾಮದ ಧನಂಜಯ್ ಹಾಗೂ ಬಡುಗಳೈಪಡಿ ಗ್ರಾಮದ ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿ ಆಲಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರತಿವಾದಿ ಮಳಲಿಪೇಟೆ ಜುಮ್ಮಾ ಮಸೀದಿಯ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿತು.
ಮಳಲಿ ಮಸೀದಿ ಅವಶೇಷಕ್ಕೂ ಗುರುಪುರ ಜಂಗಮ ಮಠಕ್ಕೂ ಹೋಲಿಕೆ
ಅಲ್ಲದೆ, ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಾದ-ಪ್ರತಿವಾದ ಆಲಿಸಿದರೂ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ಗೆ ನಿರ್ದೇಶಿಸಿ, ವಿಚಾರಣೆಯನ್ನು ಜೂ 17ಕ್ಕೆ ಮುಂದೂಡಿತು.
ಕೋರ್ಟ್ ಕಮೀಷನರ್ ನೇಮಿಸಿ
ಕೋರ್ಟ್ ಕಮೀಷನರ್ ನೇಮಿಸಿ: ಅರ್ಜಿದಾರರ ಪರ ವಕೀಲರು, ಮಳಲಿ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ರಚನೆ ಬಗ್ಗೆ ಮೊದಲು ಪರಿಶೀಲನೆಯಾಗಬೇಕು. ಅದರ ವಸ್ತುಸ್ಥಿತಿ ಪರಿಶೀಲಿಸಲು ಕೋರ್ಟ್ ಕಮಿಷನರ್ ನೇಮಕ ಮಾಡಬೇಕು. ಜ್ಞಾನವಾಪಿ ಮಸೀದಿಯ ಮಾದರಿಯಲ್ಲಿ ಕಮಿಷನರ್ ನೇಮಕ ಮಾಡುವ ಕುರಿತು ಪರಿಗಣಿಸಬೇಕಿದೆ. ಆದ್ದರಿಂದ, ಕಮಿಷನರ್ ನೇಮಕ ಮಾಡುವ ಕುರಿತು ಮನವಿ ಬಗ್ಗೆ ಸಿವಿಲ್ ಕೋರ್ಟ್ ಮೊದಲು ವಿಚಾರಣೆ ನಡೆಸಬೇಕಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಈ ಕುರಿತ ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿದೆ. ಆದರೆ, 1991ರ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅನುಸಾರ ದಾವೆಯು ವಿಚಾರಣಾ ಮಾನ್ಯತೆ ಹೊಂದಿಲ್ಲ. ಆದ್ದರಿಂದ, ಅದನ್ನು ವಜಾಗೊಳಿಸಬೇಕು ಎಂದು ಮಸೀದಿ ಅರ್ಜಿ ಸಲ್ಲಿಸಿತ್ತು. ಅದನ್ನು ಪರಿಗಣಿಸಿದ ಸಿವಿಲ್ ಕೋರ್ಟ್ ಮೊದಲು ದಾವೆಯ ಸಿಂಧುತ್ವದ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದೆ. ಆದರೆ, ಪುರಾತನ ಸ್ಮಾರಕಗಳಿಗೆ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆ ಅನ್ವಯವಾಗುವುದಿಲ್ಲ ಎಂದರು.
ಪ್ರಾಚೀನ ಕಟ್ಟಡ:
ನೂರು ವರ್ಷಕ್ಕೂ ಹಳೆಯ ಕಟ್ಟಡ ಪ್ರಾಚೀನ ಸ್ಮಾರಕ ಎನಿಸಿಕೊಳ್ಳುತ್ತದೆ. ಮಳಲಿ ಮಸೀದಿ 700 ವರ್ಷಕ್ಕೂ ಹಳೆಯದಾಗಿದೆ ಎಂದು ಮಸೀದಿಯವರೇ ಹೇಳುತ್ತಿದ್ದಾರೆ. ಹೀಗಿರುವಾಗ ಒಳಗೆ ಪತ್ತೆಯಾಗಿರುವ ದೇವಾಲಯ ಅದಕ್ಕಿಂತ ಹಳೆಯದಾಗಿರುವ ಸಾಧ್ಯತೆ ಇರುತ್ತದೆ. ಮಸೀದಿಯವರ ಮಾತನ್ನೇ ಒಪ್ಪಕೊಂಡರೂ ಪ್ರಾಚೀನ ಸ್ಮಾರಕಗಳಿಗೆ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆ ಅನ್ವಯಿಸುವುದಿಲ್ಲ. ಆದ್ದರಿಂದ, ಆ ಕಾಯ್ದೆಯ ಅಡಿ ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂಬ ಅವರ ವಾದ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಪ್ರಕರಣದ ಹಿನ್ನೆಲೆ:
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಅಸಲು ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು. ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿದೆ. ಇದರಿಂದ, ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿ
ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ಆಗ ಮಸೀದಿಯೊಳಗಡೆ ಹಿಂದೂ ದೇವಾಲಯ ಶೈಲಿಯ ಕಟ್ಟಡ ಪತ್ತೆಯಾಗಿದೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ತಹಶೀಲ್ದಾರ್ ಮೂಲಕ ಒಂದು ವಾರದವರೆಗೆ ಮಸೀದಿಯ ನವೀಕರಣ ಕಾರ್ಯವನ್ನು ಸ್ಥಗಿತಗೊಳಿಸಿತ್ತು. ಈ ನಡುವೆ ವಿಎಚ್ಪಿ ಮಸೀದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೋರ್ಟ್ ಮೂಲಕ ಮಸೀದಿ ನವೀಕರಣ ಕಾರ್ಯಕ್ಕೆ ಸಂಪೂರ್ಣ ತಡೆ ತಂದಿದೆ. ಈಗಲೂ ಈ ವಿವಾದವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ.
Recommended Video