ಮಂಗಳೂರಿಗೆ ಎಚ್ಡಿಕೆ ಭೇಟಿ: ಮೂರು ಕುಟುಂಬಕ್ಕೂ ಪರಿಹಾರ ವಿತರಣೆ
ಮಂಗಳೂರು, ಆಗಸ್ಟ್ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ವಾರದ ಅಂತರದಲ್ಲಿ ಹತ್ಯೆಗೀಡಾಗಿದ ಪ್ರವೀಣ್, ಫಾಜಿಲ್ ಹಾಗೂ ಮಸೂದ್ ಮನೆಗಳಿಗೆ ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ಮನೆಯ ಆಧಾರಸ್ಥಂಭಗಳನ್ನು ಕಳೆದುಕೊಂಡಿರುವ ಮೂವರ ಕುಟುಂಬಸ್ಥರಿಗೆ ಪಕ್ಷದ ವತಿಯಿಂದ ತಲಾ 5 ಲಕ್ಷ ಪರಿಹಾರ ನೀಡಿದರು.
ಸೋಮವಾರ ಬೆಳಗ್ಗೆಯೇ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ವಿಮಾನ ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ ಧಾವಿಸಿದರು. ಈ ಸಂದರ್ಭದಲ್ಲಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.
ಬಳಿಕ ಪ್ರವೀಣ್ ಅವರ ಪತ್ನಿ ನೂತನ ಹಾಗೂ ಅವರ ತಂದೆ ತಾಯಿಗೆ ಸಾಂತ್ವನ ಹೇಳಿದರು. ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮ ಕುಟುಂಬಕ್ಕೆ ನ್ಯಾಯ ಸಿಗುವ ದೊರೆಯುವ ರೀತಿಯಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸರಕಾರವು ಕಾಟಾಚಾರಕ್ಕೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಿದೆ. ಪ್ರಕರಣವನ್ನು ಕಾಟಾಚಾರಕ್ಕೆ ತನಿಖೆ ನಡೆಸಬಾರದು. ಇದರಲ್ಲಿ ಸತ್ಯಾಂಶ ಏನು, ಇದರ ಹಿಂದಿರುವ ಎಂತಹ ದೊಡ್ಡ ಶಕ್ತಿಗಳೇ ಇರಲಿ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸರಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ
ಆರ್ಥಿಕವಾಗಿ ಅಥವಾ ಯಾವುದೇ ರೀತಿಯ ಸಂಕಷ್ಟ ಎದುರಾದರೂ ನನಗೆ ಕರೆ ಮಾಡಿ. ನಮ್ಮ ಪಕ್ಷವು ನಿಮ್ಮ ನೆರವಿಗೆ ಧಾವಿಸುತ್ತದೆ ಎಂದು ಕುಟುಂಬದವರಿಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಕೊಟ್ಟು ಧೈರ್ಯ ಹೇಳಿದರು. ನಿಮ್ಮೊಂದಿಗೆ ನಾನೀದ್ದೇನೆ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲು ನಿಮ್ಮ ಮನೆ ಮಗನಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದು ನಾನು ನಿಮ್ಮ ಕುಟುಂಬಕ್ಕೆ ನೀಡುವ ವಚನ ಎಂದು ಕುಮಾರಸ್ವಾಮಿ ಕುಟುಂಬಕ್ಕೆ ಧೈರ್ಯ ತುಂಬಿದರು.

ಸಂಪರ್ಕಿಸಲು ನಂಬರ್ ಕೊಟ್ಟ ಮಾಜಿ ಸಿಎಂ
ಈ ಸಂದರ್ಭದಲ್ಲಿ ಪ್ರವೀಣ್ ಅವರ ಪತ್ನಿ ನೂತನ, ನನ್ನ ಪತಿಯನ್ನು ಕೊಂದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕುಮಾರಸ್ವಾಮಿ ಬಳಿ ಕಣ್ಣೀರಿಟ್ಟರು. ನೂತನ ಮಾತು ಕೇಳಿದ ಕುಮಾರಸ್ವಾಮಿ, ತಮ್ಮ ವೈಯಕ್ತಿಕ ಮೊಬೈಲ್ ನಂಬರ್ ನೀಡಿ ಯಾವುದೇ ಸಮಸ್ಯೆ ಬಂದರೂ ತಮ್ಮನ್ನು ಸಂಪರ್ಕಿಸಬಹುದು. ನಿಮಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಧೈರ್ಯ ಕಳೆದುಕೊಳ್ಳಬೇಡಿ, ಪ್ರವೀಣ್ ಜಾಗದಲ್ಲಿ ನಿಂತು ನೀನು ಕುಟುಂಬವನ್ನು ಮುನ್ನಡೆಸಬೇಕು ಎಂದರು.

ಮಸೂದ್-ಪಾಜಿಲ್ ಕುಟುಂಬಗಳಿಗೂ ಪರಿಹಾರ
ಪ್ರವೀಣ್ ಅವರಿಂತ ಮೊದಲು ಬೆಳ್ಳಾರೆ ಗ್ರಾಮದಲ್ಲಿ ಹತ್ಯೆಯಾಗಿದ್ದ ಮಸೂದ್ ಅವರ ಕಳಂಜದ ನಿವಾಸಕ್ಕೆ ಕುಮಾರಸ್ವಾಮಿ ಭೇಟಿ ನೀಡಿದರು. ಮನೆಯಲ್ಲಿದ್ದ ಮಸೂದ್ ಅವರ ಚಿಕ್ಕಪ್ಪ ಹಾಗೂ ಆ ಯುವಕನ ಅಣ್ಣ ತಮ್ಮ ಸೇರಿ ಇಡೀ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ, ಸ್ಥಳದಲ್ಲೇ ಪರಿಹಾರವಾಗಿ 5 ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರ ಮಾಡಿದರು. ಬಳಿಕ ಮಾಜಿ ಮುಖ್ಯಮಂತ್ರಿಗಳು ಸುರತ್ಕಲ್ನಲ್ಲಿ ಹತ್ಯೆಯಾದ ಫಾಝಿಲ್ ಮನೆಗೂ ಭೇಟಿ ನೀಡಿ, ತಂದೆ ತಾಯಿ ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳಿದರು. 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಚೆಕ್ ಅನ್ನು ಪೋಷಕರಿಗೆ ಹಸ್ತಾಂತರ ಮಾಡಿದರು.

ಜೆಡಿಎಸ್ ಇದ್ದ ಕಡೆ ಶಾಂತಿಯಿದೆ
ಇದಕ್ಕೂ ಮುನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕುಮಾರಸ್ವಾಮಿ, "ಶಿಕ್ಷಣ ಕಾಶಿ ಎನ್ನುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳೇ ಇಂತಹ ಘಟನೆಗಳಿಗೆ ಪ್ರಮುಖ ಕಾರಣ. ಇದು ಕೇವಲ ಶಿಕ್ಷಣ ಕ್ಷೇತ್ರವಲ್ಲ, ಧಾರ್ಮಿಕ ಕ್ಷೇತ್ರವೂ ಹೌದು, ಇಲ್ಲಿ ಹಲವು ಪವಿತ್ರ ದೇವಾಲಯಗಳಿವೆ. ದೇಶಾದ್ಯಂತ ದೇಶದ ಮೂಲೆ ಮೂಲೆಗಳಿಂದ ದರ್ಶನಕ್ಕೆ ಬರುತ್ತಾರೆ. ಆದರೆ ಈ ಜಾಗದಲ್ಲಿ ಸರಣಿ ಹತ್ಯೆ ನಡೆಯುತ್ತಿರುವುದು ನಾವೆಲ್ಲರೂ ತಲೆ ತಗ್ಗಿಸುವ ವಿಚಾರ. ರಾಜಕೀಯ ಪಕ್ಷಗಳು ಇಂತಹ ಸಂದರ್ಭದಲ್ಲಿ ಅನುಕಂಪದ ಮಾತುಗಳನ್ನಾಡಿದರೆ ಸಾಲದು, ಆಡಳಿತ ಹಾಗೂ ಕಾಂಗ್ರೆಸ್ ಪಕ್ಷಗಳು ಈ ನಿಟ್ಟಿನಲ್ಲಿ ಶಾಂತಿ ನೆಲೆಸುವ ಕೆಲಸ ಮಾಡಬೇಕು. ಜೆಡಿಎಸ್ ಪಕ್ಷ ಇರುವ ಜಾಗದಲ್ಲಿ ನಾವು ಇಂತಹ ಘಟನೆಗಳಿಗೆ ಅವಕಾಶ ಕೊಟ್ಟಿಲ್ಲ" ಎಂದರು.












Click it and Unblock the Notifications