ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ, ಮಂಗ್ಳೂರಲ್ಲಿ ಹೆಚ್ಚಿದ ಆತಂಕ
ಮಂಗಳೂರು, ಆಗಸ್ಟ್ 10: ರಾಜ್ಯದ ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾಗಿದೆ. ಕಳೆದೆರಡು ದಿನಗಳಿಂದ ಮಳೆರಾಯ ತನ್ನ ಪ್ರತಾಪ ತೋರಿಸಲು ಆರಂಭಿಸಿದ್ದಾನೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ಗುರುವಾರದಿಂದ ಭಾರೀ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಮಂಗಳೂರು ನಗರ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಈ ಪರಿಣಾಮ ಮತ್ತೆ ಮಂಗಳೂರಿನ ಜನರಲ್ಲಿ ಆತಂಕ ಸೃಷ್ಟಿಸಿದೆ. ಶುಕ್ರವಾರ ಬೆಳಗ್ಗೆಯಿಂದ ನಗರ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ನಗರದ ಕೊಟ್ಟಾರ ಚೌಕಿ, ನಂತೂರು, ಜ್ಯೋತಿ ಸರ್ಕಲ್ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದೆ. ಭಾರೀ ಮಳೆಯ ಪರಿಣಾಮ ಮಂಗಳೂರಿನ ನಗರದ ಹಲವಾರು ರಸ್ತೆಗಳಲ್ಲಿ ಮಳೆ ನೀರು ಹರಿಯಲಾರಂಬಿಸಿದೆ. ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಚರಂಡಿಗಳು ಉಕ್ಕಿ ಹರಿಯುತ್ತಿವೆ. ಕಳೆದ ಮೇ 29ರ ಮಹಾಮಳೆಯ ಪರಿಸ್ಥಿತಿ ನೆನಪಿಸುವಂತೆ ಮಂಗಳೂರಿನಲ್ಲಿ ಮಳೆ ಸುರಿಯುತ್ತಿದೆ.

ಯಾವುದೇ ಪರಿಸ್ಥಿತಿ ನಿಭಾಯಿಸಲು ಕ್ಷಿಪ್ರಕಾರ್ಯ ಪಡೆಯನ್ನು ಜಿಲ್ಲಾಡಳಿತ ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆಯ ಪ್ರಕಾರ ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ರವಾನಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಆದೇಶ ಹೊರಡಿಸಲಾಗಿದೆ.












Click it and Unblock the Notifications