ಭಕ್ತಾದಿಗಳಿಗೆ ಎಚ್ಚರಿಕೆ; ಭಾರಿ ಮಳೆ ಕಾರಣ 2 ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿಷೇಧ
ಮಂಗಳೂರು, ಆಗಸ್ಟ್ 1: ಸೋಮವಾರ ಸಂಜೆ ಸುರಿದ ಮಹಾ ಮಳೆಗೆ ಭಾರೀ ಅವಾಂತರ ಸೃಷ್ಠಿಯಾಗಿದೆ. ಭಾರೀ ಮಳೆಯಿಂದಾಗಿ ದರ್ಪಣತೀರ್ಥ ನದಿ ಮೈ ತುಂಬಿ ಹರಿದಿದ್ದು, ನದಿ ದಡದಲ್ಲಿರುವ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ನುಗ್ಗಿದೆ. ಅನೇಕ ವರ್ಷಗಳ ನಂತರ ಆದಿ ದೇವಳದ ಒಳಗೆ ದರ್ಪಣ ತೀರ್ಥವನ್ನ ಪ್ರವೇಶಿಸಿದ್ದು, ಶ್ರೀ ದೇವಳದ ಒಳಾಂಗಣ, ಹೊರಾಂಗಣವು ಸಂಪೂರ್ಣವಾಗಿ ಜಲಾವೃತ್ತಗೊಂಡಿದೆ. ಮಳೆಯ ಹಿನ್ನಲೆಯಲ್ಲಿ ಭಕ್ತರು ಮುಂದಿನ ಎರಡು ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಭಕ್ತರಿಗೆ ಮನವಿ ಮಾಡಿದ್ದಾರೆ.
ದರ್ಪಣತೀರ್ಥ ನದಿಯು ತುಂಬಿ ಹರಿದ ಕಾರಣ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಅಲ್ಲದೆ ದರ್ಪಣ ತೀರ್ಥದಲ್ಲಿನ ಪ್ರವಾಹದಿಂದ ಸುಬ್ರಹ್ಮಣ್ಯ-ಪುತ್ತೂರು- ಮಂಜೇಶ್ವರ ಅಂತರ್ ರಾಜ್ಯ ಸಂಪರ್ಕ ರಸ್ತೆಯ ಸೇತುವೆಯೂ ಮುಳುಗಡೆಯಾಗಿದೆ.
ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ದೇಶದಲ್ಲಿ ವಾಡಿಕೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಕುಕ್ಕೆಯಲ್ಲಿ ಸುರಿಯುತ್ತಿರುವ ಮಹಾಮಳೆಯಿಂದ ದರ್ಪಣ ತೀರ್ಥ ನದಿ ತುಂಬಿ ಹರಿಯುತ್ತಿರುವುದರಿಂದ ತಟದಲ್ಲಿನ ಸುಮಾರು 12ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ನದಿ ತಟದ ಮನೆಯವರು ದರ್ಪಣ ತೀರ್ಥ ಗಂಗಾಮಾತೆಗೆ ತನ್ನ ರುದ್ರಪ್ರವಾಹವನ್ನು ಕಡಿಮೆ ಮಾಡುವಂತೆ ಪ್ರಾರ್ಥಿಸಿ ಭಾಗಿನ ಸಮರ್ಪಣೆ ಮಾಡಿದ್ದಾರೆ.
ನಾಲ್ಕು ಗ್ರಾಮಗಳು ಸಂಪೂರ್ಣ ಸಂಪರ್ಕ ಕಡಿತ
ಸುಬ್ರಹ್ಮಣ್ಯಕ್ಕೆ ಹೊಂದಿಕೊಂಡ ಹರಿಹರ ಬಾಳುಗೋಡು, ಕೊಲ್ಲಮೊಗ್ರು ಕಲ್ಮಕಾರು,ಬಾಳುಗೋಡು ಐನಕಿದು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಜಲಪ್ರಳಯವೇ ಸಂಭವಿಸಿದೆ. ಮಳೆಯ ಭೀಕರತೆಗೆ ಈ ನಾಲ್ಕು ಗ್ರಾಮಗಳು ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ. ಹಾನಿಗೊಳಗಾಗಿರುವ ನಾಲ್ಕು ಗ್ರಾಮಗಳು ಈಗ ದ್ವೀಪದಂತಾಗಿದೆ. ಈ ನಾಲ್ಕೂ ಗ್ರಾಮಗಳನ್ನು ಸಂಧಿಸಲು ನಡುಗಲ್ಲು ಒಂದೇ ಏಕಮಾರ್ಗವಾಗಿದೆ. ನಡುಗಲ್ಲು ಪ್ರದೇಶದ ಮಲ್ಲಾರದ ದೊಡ್ಡ ಶಂಖ ಎಂಬಲ್ಲಿ ಸೇತುವೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಸೇತುವೆ ಮುಳುಗಡೆಯಾದರೂ ಬೈಕ್ ನಲ್ಲಿ ತೆರಳುತಿದ್ದ ಕೊಲ್ಲಮೊಗ್ರು ಗ್ರಾಮದ ಸವಾರನ ಬೈಕ್ ನೀರು ಪಾಲಾಗಿದೆ. ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುಂಡಡ್ಕ ಸೇತುವೆ ಮುಳುಗಡೆ
ಕಲ್ಮಕಾರು ಭಾಗದಿಂದ ಕೊಲ್ಲಮೊಗ್ರು ಹರಿಹರ ಮೂಲಕ ಹರಿಯುವ ನದಿ ತುಂಬಿದ್ದು, ಹರಿಹರ ಮುಖ್ಯ ಪೇಟೆ ಬಾಗಶ: ಮುಳುಗಡೆಗೊಂಡಿದೆ. ಹರಿಹರದಿಂದ ಕೊಲ್ಲಮೊಗ್ರು, ಕಲ್ಮಕಾರು ಭಾಗಕ್ಕೆ ಸಂಚರಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಸುಬ್ರಹ್ಮಣ್ಯ ಮಳೆಯಾಳ ಮಾರ್ಗವಾಗಿ ಹರಿಹರ ಈ ಭಾಗದ ಗುಂಡಡ್ಕ ಸೇತುವೆ ಮುಳುಗಡೆಗೊಂಡಿದೆ. ಪಲ್ಲತ್ತಡ್ಕದಲ್ಲೂ ನದಿ ದಂಡೆ ಮೇಲಿನ ಎರಡು ಮನೆಗಳು ಸಂಪೂರ್ಣ ಜಲಾವೃತವಾಗಿದೆ.
ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ನೆರೆ
ಇತಿಹಾಸದಲ್ಲಿ ಈ ಪ್ರಮಾಣದಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಮಳೆಯಾಗಿದ್ದು, ದೊಡ್ಡ ಪ್ರಮಾಣದ ನೆರೆ ಉಕ್ಕಿ ಹರಿದಿದೆ. ಪುರಾತನ ಶ್ರೀ ಹರಿಹರೇಶ್ವರ ದೇಗುಲದಲ್ಲಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಿಶೋರ್ ಕೂಜುಗೋಡು ನೇತೃತ್ವದಲ್ಲಿ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ದೇಗುಲದಲ್ಲಿ ರಾತ್ರಿ ಪೂಜೆ ವೇಳೆ ಹೆಚ್ಚಿನ ಪ್ರಾಕ್ರತಿಕ ವಿಕೋಪ ಸಂಭವಿಸದಂತೆ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.
ಎಸ್ಡಿಆರ್ಎಪ್ ಹಾಗೂ ಎನ್ಡಿಆರ್ಎಪ್ ತಂಡ ನಿಯೋಜನೆ
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು, ಹರಿಹರ, ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತ ಕ್ರಮವಹಿಸಲು ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ತಂಡವನ್ನು ಆ ಭಾಗಕ್ಕೆ ಈಗಾಗಲೇ ಕಳುಹಿಸಿಕೊಡಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ ಗಮನಹರಿಸಬೇಕು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ಒಂದೆರಡು ದಿನಗಳು ಕಾದು ಮಳೆ ಕಡಿಮೆಯಾದ ಬಳಿಕ ಕ್ಷೇತ್ರ ಸಂದರ್ಶಿಸುವಂತೆ ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ.
Recommended Video