ಕರಾವಳಿಯಲ್ಲಿ ಮುಂದುವರಿದ ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಮಂಗಳೂರು, ಆಗಸ್ಟ್ 12: ರಾಜ್ಯದ ಕರಾವಳಿಯಲ್ಲಿ ಮತ್ತೆ ಮಳೆಯ ಆರ್ಭಟ ಆರಂಭವಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಮೂರು ದಿನಗಳಿಂದ ಮಳೆರಾಯ ಮತ್ತೆ ತನ್ನ ಪ್ರತಾಪ ತೋರಲು ಆರಂಭಿಸಿದ್ದಾನೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯಲ್ಲಿ ಮುಂಬರುವ 3 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯ ಪ್ರಕಾರ ಆಗಸ್ಟ್ 13 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದ್ದು, ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಕ್ಕೆ ಸೂಚನೆ ರವಾನಿಸಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮಂಗಳೂರಿನಿಂದ ಕಾರವಾರದವರೆಗೆ ಸಮದ್ರದಲ್ಲಿ ಆಳೆತ್ತರದ ಭಾರೀ ಅಲೆಗಳು ಏಳಲಿದ್ದು, ಮುಂಜಾಗ್ರತೆ ವಹಿಸುವಂತೆ ತಿಳಿಸಲಾಗಿದೆ. ಕಡಲಲ್ಲಿ 3 ರಿಂದ 3.8 ಮೀಟರ್ ಎತ್ತರದ ಅಲೆಗಳು ಏಳಲಿದ್ದು, 25 ರಿಂದ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ.

ಈ ಹಿನ್ನೆಲೆಯಲ್ಲಿ ಕಡಲ ತಡಿಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ರವಾನಿಸಲಾಗಿದೆ. ಕಡಲು ಪ್ರಕ್ಷುಬ್ದಗೊಳ್ಳಲಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ರವಾನಿಸಲಾಗಿದೆ. ಮಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಹಾಗೆಯೇ ಮಂಗಳೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ ಜಡಿ ಮಳೆ ಸುರಿಯುತ್ತಿದೆ.

ಬೆಳ್ತಂಗಡಿ ತಾಲೂಕಿನಲ್ಲಿಯೂ ರಾತ್ರಿ ಭಾರೀ ಗಾಳಿ ಮಳೆ ಸುರಿದಿದ್ದು, ಹಲೆವೆಡೆ ಅಡಿಕೆ ಮರಗಳು ಉರುಳಿಬಿದ್ದಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.












Click it and Unblock the Notifications