ಭಾರೀ ಮಳೆ: ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು, ಜುಲೈ 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜುಲೈ 25 ರಂದೂ ವ್ಯಾಪಕ ಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 25ರ ಮಂಗಳವಾರ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರೀ ಮಳೆ ಸುರಿದ ಪರಿಣಾಮ ಸುಬ್ರಮಣ್ಯ -ಪಂಜ ಮಾರ್ಗದ ಪರ್ವತಮುಖಿ ಎಂಬಲ್ಲಿ ರಸ್ತೆಯಲ್ಲಿ ಕುಮಾರಧಾರಾ ನದಿ ಹರಿದಿದೆ.ಈ ಹಿನ್ನಲೆಯಲ್ಲಿ ವಾಹನ ಸಂಚಾರ ಸ್ಥಗಿತ ಮಾಡಲಾಗಿದೆ.

ಜಿಲ್ಲೆಯಾದ್ಯಾಂತ ಭಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ..ನೆರೆ ನೀರಿನ ನಡುವೆಯೇ ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿದೆ..
ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಇದ್ದರೂ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿದೆ. ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಿತ್ತಿವೆ. ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿತ್ತು.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಪರೀಕ್ಷೆ ಗಳು ನಡೆದಿದ್ದರಿಂದ ಪ್ರವಾಹ ನೀರಿನಲ್ಲೂ ವಿದ್ಯಾರ್ಥಿಗಳು ಒದ್ದೆಯಾಗುತ್ತಾ ಕಾಲೇಜುಗಳಿಗೆ ಆಗಮಿಸಿ ಪರೀಕ್ಷೆ ಎದುರಿಸಿದ್ದಾರೆ.
ಭಾರೀ ಮಳೆಗೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ರಸ್ತೆಯ ಸೇತುವೆಯು ಕೊಚ್ಚಿ ಹೋಗಿದ್ದು, ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭೇಟಿ ನೀಡಿದ್ದಾರೆ. ಸ್ಥಳ ಪರಿಶೀಲನೆ ಮಾಡಿದ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಮಾಹಿತಿಯನ್ನು ಪಡೆದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನ ಶಾಲಾ ಕಾಲೇಜು, ಅಂಗನವಾಡಿಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನ ತಾಲೂಕಿಗೆ ನಾಳೆ ರಜೆ ಘೋಷಿಸಲಾಗಿದೆ.












Click it and Unblock the Notifications