ದಕ್ಷಿಣ ಕನ್ನಡ; ಭಾರೀ ಮಳೆ ಎಚ್ಚರಿಕೆ, ರೆಡ್ ಅಲರ್ಟ್ ಘೋಷಣೆ
ಮಂಗಳೂರು, ಮೇ 16: ವಾಯುಭಾರ ಕುಸಿತದ ಪರಿಣಾಮ ಮಂಗಳೂರು ನಗರದಾದ್ಯಂತ ಸೋಮವಾರ ಸಂಜೆ ಹೊತ್ತಿಗೆ ಸಿಡಿಲು ಸಹಿತ ಮಳೆ ಸುರಿದಿದೆ. ನಗರದಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ಮಳೆಯಾಗಿದೆ.
ಸೋಮವಾರ ಸಂಜೆ 4 ಗಂಟೆಯ ವೇಳೆಗೆ ಆರಂಭವಾದ ಮಳೆ ನಿರಂತರ ಎರಡು ಗಂಟೆಗಳ ಕಾಲ ಸುರಿದಿದೆ. ಭಾರೀ ಮಳೆ ಬಿಸಿಲಿನ ಧಗೆಗೆ ತಂಪೆರೆದಿದೆ. ಮಳೆಯ ಪರಿಣಾಮ ಸಂಜೆ ಹೊತ್ತಿಗೆ ಮನೆಗೆ ಹೋಗುವ ಜನರು ಸಂಕಷ್ಟಕ್ಕೆ ಸಿಲುಕಿದರು.
ಸಂಜೆ 6 ಗಂಟೆಗೇ ದಟ್ಟ ಮೋಡ ಆವರಿಸಿ ಇಡೀ ನಗರದಲ್ಲಿ ಕತ್ತಲೆಯ ವಾತವರಣ ನಿರ್ಮಾಣವಾಗಿತ್ತು. ಭಾರತೀಯ ಹವಾಮಾನ ಇಲಾಖೆ ಇನ್ನೂ 4 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಗುರುವಾರದ ತನಕ ಮೂರು ದಿನಗಳ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ಮತ್ತು ಬುಧವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಗುರುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೂರು ದಿನಗಳ ಕಾಲ ಮಳೆ: ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪ್ರತಿದಿನ ತಲಾ 100 ಮಿ. ಮೀ. ನಿಂದ 150 ಮಿ. ಮೀ. ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ.ರಾಜೇಂದ್ರ ಆದೇಶಿಸಿದ್ದಾರೆ.
ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶಗಳು, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಈ ಸಂದರ್ಭ ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಸಮುದ್ರತೀರ, ನದಿತೀರಗಳಿಗೆ ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.