Heavy Rain: ಮಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಮನೆ ಮೇಲೆ ಬಿದ್ದ ಮರ
ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕೂಡ ಮಳೆ ಶುರುವಾಗಿದ್ದು, ಶನಿವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಮನೆಗಳಿಗೆ ಹಾನಿಯಾಗಿದೆ.
ಬಿರುಗಾಳಿ ಮಳೆಯಿಂದಾಗಿ ಕುಟ್ರುಪಾಡಿಯಲ್ಲಿ ಮನೆಯೊಂದರ ಮೇಲೆ ಮರ ಮುರಿದು ಬಿದ್ದಿದ್ದು ಮನೆಯ ಮೇಲ್ಛಾವಣಿಗೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಕುಟ್ರುಪಾಡಿಯ ಬಾಬು ಮತ್ತು ಲಕ್ಷ್ಮೀ ದಂಪತಿಗಳಿಗೆ ಸೇರಿದ ಮನೆ ಮೇಲೆ ಮರ ಬಿದ್ದಿದೆ. ದಂಪತಿಗಳು ಅಪಾಯದಿಂದ ಪಾರಾಗಿದ್ದು, ಶೌಚಾಲಯ, ನೀರಿನ ಟ್ಯಾಂಕ್ ಸಂಪೂರ್ಣ ನಾಶವಾಗಿದೆ. ಪಕ್ಕದಲ್ಲಿರುವ ಒಂದೆರೆಡು ಮನೆಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಕಡಬ ತಹಶಿಲ್ದಾರ್ ಪ್ರಭಾಕರ್ ಖಜೂರೆ,ಅರಣ್ಯ ಇಲಾಖೆಯ ಸಿಬ್ಬಂದಿಗಳು, ಕಂದಾಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಭಾರಿ ಬಿರುಗಾಳಿ ಮಳೆಯಿಂದಾಗಿ ಕಡಬ ತಾಲೂಕಿನಾದ್ಯಂತಾ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಶನಿವಾರ ರಾತ್ರಿ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ
ಶನಿವಾರ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆಯಾಗಿದೆ. ಚಿಕ್ಕಮಗಳೂರು, ಧಾರವಾಡ, ಕೊಡಗು, ಮೈಸೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿರುವ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕೊಡಗು ಜಿಲ್ಲೆಯ ಸೋಮವಾರ ಪೇಟೆ, ಶನಿವಾರಸಂತೆ, ಕುಂಚೆಬೈಲೆ, ಕುಂತೂರಿನಲ್ಲಿ ಮಳೆಯಾಗಿದೆ.
ಹೊರನಾಡು, ಸಂಸೆ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಮೂಡಿಗೆರೆ ಸೇರಿದಂತೆ ಚಿಕ್ಕಮಗಳೂರಿನ ಹಲವು ಕಡೆಗಳಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ.












Click it and Unblock the Notifications