ಕರಾವಳಿಯಲ್ಲಿ ಜೂ. 7, 8 ರಂದು ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ
ಮಂಗಳೂರು, ಜೂನ್ 6: ಕರಾವಳಿಯಲ್ಲಿ ಮತ್ತೆ ಮಹಾಮಳೆಯ ಅತಂಕ ಅರಂಭವಾಗಿದೆ. ಕರಾವಳಿಯಲ್ಲಿ ಜೂನ್ 7 ಮತ್ತು 8 ರಂದು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು ಹೈ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಎಚ್ಚರಿಕೆಯ ಪ್ರಕಾರ ಮುಂದಿನ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶ, ಕೇರಳ, ಗೋವಾ , ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈ ಸಂಬಂಧ ವಿಶೇಷವಾಗಿ ಕೇಂದ್ರ ಹವಾಮಾನ ಇಲಾಖೆ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಕರ್ನಾಟಕದ ಕರಾವಳಿಯಲ್ಲಿ ಎಚ್ಚರ ವಹಿಸುವಂತೆ ತಿಳಿಸಿದೆ.

ಹವಾಮಾನ ಇಲಾಖೆಯ ಸೂಚನೆಯಂತೆ, ಜೂನ್ 8 ರಂದು ದಕ್ಷಿಣ ಕನ್ನಡ , ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಒಂದು ಅಂದಾಜಿನ ಪ್ರಕಾರ ಜೂನ್ 8 ರಂದು ಈ ಮೂರು ಜಿಲ್ಲೆಗಳಲ್ಲಿ 65 ಮಿ.ಮೀ ನಿಂದ 115 ಮಿ.ಮೀ ವರೆಗೆ ಭಾರೀ ಮಳೆ ಸುರಿಯಲಿದೆ. ಸಮುದ್ರದ ಮಟ್ಟದಲ್ಲಿ ಏರಿಕೆ ಯಾಗುವ ಆತಂಕವಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಆದೇಶ ಹೊರಡಿಸಲಾಗಿದೆ.

ಕರಾವಳಿಗೆ ಈಗಾಗಲೇ ಮುಂಗಾರು ಮಾರುತಗಳ ಪ್ರವೇಶವಾಗಿದೆ ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್ 6 ರ ಬಳಕೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಹವಾಮಾನ ಇಲಾಖೆ ಜೂನ್ 7 ಮತ್ತು 8 ರಂದು ಮಹಾಮಳೆ ಸುರಿಯುವ ಎಚ್ಚರಿಕೆ ನೀಡಿದೆ.












Click it and Unblock the Notifications