ಮಂಗಳೂರಿನಲ್ಲಿ ರೌಡಿ ಶೀಟರ್, ಫಾಝಿಲ್ ಹತ್ಯೆ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ
ಮಂಗಳೂರಿನಲ್ಲಿ ಮತ್ತೊಮ್ಮೆ ದ್ವೇಷದ ಕಿಚ್ಚಿಗೆ ನೆತ್ತರು ಹರಿದಿದೆ. ಬಜಪೆಯ ಕಿನ್ನಿಪದವು ಎನ್ನುವಲ್ಲಿ ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ನಿರ್ಮಾಣ ಮಾಡಿದೆ.
ಕೊಲೆಯಾದ ಸುಹಾಸ್ ಶೆಟ್ಟಿ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಫಾಜಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ. ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀನ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಮಹಮ್ಮದ್ ಫಾಜಿಲ್ನನ್ನು ಹತ್ಯೆ ಮಾಡಲಾಗಿತ್ತು ಎನ್ನುವ ಆರೋಪವಿದೆ.

ಮಂಗಳೂರಿನಲ್ಲಿ ಇತ್ತೀಚೆಗೆ ತಾನೆ ಕೇರಳದ ಯುವಕ ಆಶ್ರಫ್ ಎನ್ನುವವನ ಕೊಲೆ ನಡೆದಿತ್ತು. ಆತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಎಂದು ಆರೋಪಿಸಿ ಗುಂಪೊಂದು ಹಲ್ಲೆ ಮಾಡಿದ್ದ ಕಾರಣ ಆಶ್ರಫ್ ಮೃತಪಟ್ಟಿದ್ದ. ಘಟನೆಗೆ ಸಂಬಂಧಪಟ್ಟಂತೆ ಹಲವರನ್ನು ಬಂಧಿಸಲಾಗಿತ್ತು. ನಗರದಲ್ಲಿ ಪದೇ ಪದೇ ಕೊಲೆಗಳು ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಕಾರು ಅಡ್ಡಗಟ್ಟಿ ಕೊಲೆ ಮಾಡಿದ ದುಷ್ಕರ್ಮಿಗಳು
ಸುಹಾಸ್ ಇನೋವಾ ಕಾರಿನಲ್ಲಿ ಸಹಚರರ ಜೊತೆ ತೆರಳುತ್ತಿದ್ದ ಸಂದರ್ಭದಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳು, ಗೂಡ್ಸ್ ವಾಹನದಲ್ಲಿ ಬಂದು ಸುಹಾಸ್ ತೆರಳುತ್ತಿದ್ದ ಕಾರಿಗೆ ಗುದ್ದಿದ್ದಾರೆ. ಗುದ್ದಿದ ರಭಸಕ್ಕೆ ಸುಹಾಸ್ ಇದ್ದ ಕಾರು ಸಲೂನ್ ಶಾಪ್ಗೆ ನುಗ್ಗಿದೆ. ಬಳಿಕ ನಡುರಸ್ತೆಯಲ್ಲೆ ಮಾರಕಾಸ್ತ್ರಗಳಿಂದ ಸುಹಾಸ್ ಮೇಲೆ ಮನಸೋಇಚ್ಚೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಸುಹಾಸ್ ಶೆಟ್ಟಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ಲಾನ್ ಮಾಡಿಯೇ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತನಿಖೆ ಆರಂಭಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸುವುದಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸದ್ಯ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗುತ್ತದೆ. ಮೇಲ್ನೋಟಕ್ಕೆ ಇದು ಪ್ರತೀಕಾರಕ್ಕಾಗಿ ಮಾಡಿದ ಹತ್ಯೆ ಎಂದು ತಿಳಿಸಿದ್ದಾರೆ.
ಈಗಾಗಲೇ ಮಂಗಳೂರಿನಲ್ಲಿ ನಾಕಾಬಂದಿ ಹಾಕಲಾಗಿದ್ದು ಆರೋಪಿಗಳು ಹೊರಹೋಗದಂತೆ ಪೊಲೀಸರು ಎಚ್ಚರ ವಹಿಸುತ್ತಿದ್ದಾರೆ. ನಗರದಲ್ಲಿ ರಾತ್ರಿಯಿಡೀ ಪೊಲೀಸ್ ಗಸ್ತು ತಿರುಗುವಂತೆ ಸೂಚನೆ ಕೊಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಸದ್ಯ ಘಟನೆ ಬಗ್ಗೆ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ಬೆಂಬಲಿಗರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.











Click it and Unblock the Notifications