ಮಂಗಳೂರಿನಲ್ಲಿ ಯೋಗಿ ಸರಕಾರ ಮಾಡೆಲ್;ಅಕ್ರಮ ಗೋಮಾಂಸ ಆರೋಪಿ ಆಸ್ತಿ ಮುಟ್ಟುಗೋಲು
ಮಂಗಳೂರು, ಜುಲೈ 9: ನಗರದ ಅಡ್ಯಾರ್ನ ಕೋಟೆ ಎಂಬಲ್ಲಿ ಅಕ್ರಮ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿ ಬಾತೀಶ್ ಎಂಬಾತನ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಮಂಗಳೂರು ವಿಭಾಗ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ.
ಅಕ್ರಮ ಗೋ ಹತ್ಯೆ ಪ್ರಕರಣಗಳನ್ನು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ 2020ರನ್ವಯ ಕ್ರಮ ಕೈಗೊಳ್ಳುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ. ಯವರ ಸೂಚನೆಯ ಮೇರೆಗೆ ಇದೀಗ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಗೋಹತ್ಯೆ ಪ್ರಕರಣದಲ್ಲಿ ಮೊದಲ ಆಸ್ತಿ ಮುಟ್ಟುಗೋಲಿಗೆ ನೋಟಿಸ್ ಜಾರಿಗೊಳಿಸಿದೆ.
ಆರೋಪಿ ಬಾತಿಶ್ ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜುಲೈ 3ರಂದು ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 95 ಕೆಜಿ ಜಾನುವಾರು ಮಾಂಸ, ತೂಕದ ಯಂತ್ರಗಳು, ಕತ್ತಿ, ಮರದ ದಿಮ್ಮಿ, ಪ್ಲಾಸ್ಟಿಕ್ ಸಾಮಾಗ್ರಿಗಳು, ಕಬ್ಬಿಣದ ಕೊಕ್ಕೆಗಳನ್ನು ವಶಪಡಿಸಿಕೊಂಡಿದ್ದರು. ಈತ ಎ.ಕೆ.ಖಾಲಿದ್ ಎಂಬವರ ಮನೆಗೆ ಹೊಂದಿಕೊಂಡಿರುವ ಶೆಡ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ. ದಾಳಿ ವೇಳೆ ಆರೋಪಿ ಪರಾರಿಯಾಗಿದ್ದ.

ಆರೋಪಿ ಬಾತೀಶ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಜು.12 ರಂದು ಮಧ್ಯಾಹ್ನ 3ಗಂಟೆಗೆ ಸಹಾಯಕ ಆಯುಕ್ತರ ನ್ಯಾಯಲಯದಲ್ಲಿ ವಿಚಾರಣೆ ನಡೆಯಲಿದೆ. ಈತ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಕಡಿದು ಮಾರಾಟ ಮಾಡಿರುವ ಸ್ಥಳ, ಶೆಡ್, ಕತ್ತಿ, ತೂಕಯಂತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಸೊತ್ತು ಮೌಲ್ಯಮಾಪನ ಮಾಡಿ ವರದಿ ಸಲ್ಲಿಕೆಗೆ ಆದೇಶ ನೀಡಲಾಗಿದೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಾಂ 8 (5) ಅಡಿಯಲ್ಲಿ ಕಾಯ್ದೆಯನ್ನು ಉಲ್ಲಂಘಿಸಿ ಗೋಹತ್ಯೆ, ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿ ಖಾನೆಯನ್ನು ನಡೆಸುತ್ತಿದ್ದ ಆರೋಪಿಗಳ ಸ್ವತ್ತುಗಳನ್ನು, ಅಕ್ರಮ ಕಸಾಯಿ ಖಾನೆ ಆಗುತ್ತಿದ್ದ ಜಾಗ, ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಮುಟ್ಟುಗೋಲು ಹಾಕಲು ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯಲ್ಲಿ ಅಧಿಕಾರ ನೀಡಲಾಗಿದೆ
ಅರ್ಕುಳ ಗ್ರಾಮದ ಅರ್ಕುಳ ಕೋಟೆಯ ನಿವಾಸಿ ಎ.ಕೆ. ಖಾಲಿದ್ ಮನೆಗೆ ತಾಗಿಕೊಂಡಿದ್ದ ಶೆಡ್ ನಲ್ಲಿ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆ ಮತ್ತು ಅಲ್ಲಿ ಗೋಹತ್ಯೆಗೆ ಬಳಸಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಯನ್ನು ಪೊಲೀಸ್ ಅಧಿಕಾರಿಗಳು ಆರಂಭಿಸಿದ್ದಾರೆ. ಖಾಲಿದ್ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ನಮ್ಮ ರಾಜ್ಯ ಸರಕಾರ ಜಾರಿಗೆ ತಂದಿರುವ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಲ್ಲಿ ಅದರ ಉದ್ದೇಶ ಈಡೇರಿದಂತಾಗುತ್ತದೆ. ಆರೋಪಿಗಳ ಸ್ವತ್ತುಗಳನ್ನು ಮುಟ್ಟುಗೋಲು ಹಾಕಲು ಅಧಿಕಾರಿಗಳಿಗೆ ಕಾಯ್ದೆಯಲ್ಲಿಯೇ ಅಧಿಕಾರ ನೀಡಲಾಗಿದೆ. ಅದನ್ನು ಅಧಿಕಾರಿಗಳು ಖಡಕ್ಕಾಗಿ ಬಳಸುವ ಮೂಲಕ ಗೋಹಂತಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಗೋಹಂತಕರ ವಿರುದ್ಧ ನಿರ್ದಾಕ್ಷಿಣವಾಗಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದ್ದು, ಕಾಯ್ದೆಯಲ್ಲಿ ನೀಡಲಾಗಿರುವ ಅಧಿಕಾರವನ್ನು ಬಳಸಿ ಅರ್ಕುಳದ ಖಾಲಿದ್ ಸ್ವತ್ತನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆ ಆರಂಭವಾಗಿದೆ ಅಂತಾ ತಿಳಿಸಿದ್ದಾರೆ.












Click it and Unblock the Notifications