ಟಿಪ್ಪು ಸುಲ್ತಾನ ಜಯಂತಿ ಮುಂದುವರೆಸಲು ಮುಸ್ಲಿಂ ಲೀಗ್ ಒತ್ತಾಯ
ಮಂಗಳೂರು ಸಪ್ಟೆಂಬರ್ 9: ರಾಜ್ಯ ರಾಜಕೀಯದಲ್ಲಿ ಮತ್ತೆ ಟಿಪ್ಪು ಸುಲ್ತಾನ್ ಹೆಸರು ಚರ್ಚೆಗೆ ಬರುವ ಲಕ್ಷಣಗಳು ಕಂಡುಬರುತ್ತಿದೆ. ಮಂಗಳೂರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ವಿಚಾರವನ್ನು ಮತ್ತೇ ಪ್ರಸ್ತಾಪಿಸಲಾಗಿದೆ.
ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಅವರ ಹೆಸರಿಡುವಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಒತ್ತಾಯಿಸಿದೆ . ಈ ಕುರಿತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.
ಮಂಗಳೂರಿಗೆ ಶುಕ್ರವಾರ ಆಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಲೀಗ್ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿದೆ. ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಒತ್ತಾಯಿಸಿದೆ.

ರಾಜ್ಯದಲ್ಲಿ ನವೆಂಬರ್ 10ರಂದು ಆಚರಿಸಲ್ಪಡುವ ಟಿಪ್ಪು ಸುಲ್ತಾನ್ ಜಯಂತಿಯ ಆಚರಣೆಯನ್ನು ಮುಂದುವರೆಸುವಂತೆ ಒತ್ತಾಯ ಮಾಡಲಾಗಿದೆ. ಈ ಹಿಂದಿನಿಂದಲೂ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನುಆಚರಿಸದಂತೆ ಹಿಂದೂ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸುತ್ತಿವೆ.
ಇದ್ಯಾವುದಕ್ಕೂ ಸೊಪ್ಪು ಹಾಕದೇ ಯಶಸ್ವಿಯಾಗಿ ಟಿಪ್ಪು ಜಯಂತಿ ಆಚರಿಸಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಒತ್ತಾಯಿಸಿದೆ.
ಅದಲ್ಲದೇ ರಾಜ್ಯದಲ್ಲಿ ಸಾಹಸ ಮೆರೆದವರಿಗೆ ಟಿಪ್ಪು ಸುಲ್ತಾನ್ ನಾಮಾಂಕಿತದಲ್ಲಿ ಶೌರ್ಯ ಪ್ರಶಸ್ತಿ ನೀಡಲು ಕ್ರಮ ಕೈಗೊಳ್ಳುವಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಿಯೋಗ ಮುಖ್ಯಂತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ. ಮನವಿಗೆ ಸ್ಪಂದಿಸುವುದಾಗಿ ಮುಖ್ಯಂತ್ರಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications