ಕರಾವಳಿಯಲ್ಲಿ ಇನ್ನು ಆರು ತಿಂಗಳಲ್ಲಿ ಬದಲಾವಣೆ ಕಾಣಲಿದೆ; ಸಿಎಂ
ಮಂಗಳೂರು, ನವೆಂಬರ್ 05: ಕರಾವಳಿಯಲ್ಲಿ ಆಂತರಿಕ ಭದ್ರತೆ ಹಾಗೂ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಆರು ತಿಂಗಳಿನಲ್ಲಿ ಕರಾವಳಿಯಲ್ಲಿ ಬದಲಾವಣೆಗಳು ಕಾಣಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಗುರುವಾರ ಮಂಗಳೂರಿನ ಸಿವಿ ರಮಣ ಪೈ ಹಾಲ್ ನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ನಂತರ ನಡೆದ ಕೋರ್ ಕಮಿಟಿಯಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡರು.
ಮಂಗಳೂರಿನಲ್ಲಿ 20 ವರ್ಷಗಳ ನಂತರ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷವನ್ನು ಬಲಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಚುನಾವಣೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಅಭ್ಯರ್ಥಿಗಳ ಗೆಲುವಿಗೆ ಸಂಪೂರ್ಣ ಪರಿಶ್ರಮ ಹಾಕಬೇಕು ಎಂದು ಸಲಹೆ ನೀಡಿದರು.

ಕರಾವಳಿಯಲ್ಲಿ ಆಂತರಿಕ ಭದ್ರತೆಗೆ ಪ್ರಾಶಸ್ತ್ಯ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಆರು ತಿಂಗಳಿನಲ್ಲಿ ಕರಾವಳಿಯಲ್ಲಿ ಬದಲಾವಣೆಯಾಗಲಿದೆ. ಸಾಗರದ ಅಲೆಗಳಿಂದ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆ ಕುರಿತು ಕ್ರಮ ಕೈಗೊಂಡಿದ್ದೇವೆ ಎಂದರು. ಇದೇ ಸಂದರ್ಭ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕೊರೊನಾ ನಿಯಂತ್ರಣವಾಗುತ್ತಿದೆ. ಆದರೆ ಇನ್ನೂ ಹಲವು ತಿಂಗಳುಗಳ ಕಾಲ ಕೊರೊನಾ ನಿಯಮಗಳನ್ನು ಪಾಲಿಸಲೇಬೇಕಿದೆ" ಎಂದು ಹೇಳಿದರು.
ಶಿರಾ, ಆರ್ ಆರ್ ನಗರ ಉಪಚುನಾವಣೆ ಕುರಿತು ಮಾತನಾಡಿ, ಆರ್.ಆರ್ ನಗರದಲ್ಲಿ ಬಿಜೆಪಿಗೆ 40 ಸಾವಿರ ಮತಗಳ ಅಂತರದ ಗೆಲುವಾಗಲಿದೆ. ಶಿರಾದಲ್ಲಿ 25 ಸಾವಿರ ಮತಗಳ ಅಂತರದ ಗೆಲುವಾಗಲಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸುತ್ತದೆ. ಫಲಿತಾಂಶದ ದಿನ ಉತ್ತರ ಸಿಗಲಿದೆ ಎಂದರು.
ರಾಜ್ಯಾಧ್ಯಕ್ಷ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸದಾನಂದ ಗೌಡ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.












Click it and Unblock the Notifications