ಕುಕ್ಕೆ ಸುಬ್ರಮಣ್ಯದಲ್ಲಿ ಅವ್ಯವಹಾರದ ಆರೋಪ; ದೂರಿನ ವಿವರಗಳು
ಮಂಗಳೂರು, ಅಕ್ಟೋಬರ್ 22 : ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಲ್ಲಿ ಅತಿ ಶ್ರೀಮಂತ ದೇವಾಲಯ ಇದಾಗಿದೆ.
ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಗೆ ಟಿ. ಎಸ್. ಶ್ರೀನಾಥ್ ಎಂಬುವವರು ಈ ಕುರಿತು ದೂರು ನೀಡಿದ್ದಾರೆ. ಕುಕ್ಕೆ ಸುಬ್ರಮಣ್ಯ ದೇವಾಲಯದ ಆಡಳಿತಾಧಿಕಾರಿ ರೂಪಾ ಎಂ. ಜೆ. ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ. ಎಚ್. ವಿರುದ್ಧ ದೂರು ನೀಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಡಳಿತದ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಕೋಟ್ಯಾಂತರ ರೂಪಾಯಿ ಬೆಳೆ ಬಾಳುವ ಆಭರಣ ವಿಗ್ರಹಗಳ ಬಗ್ಗೆ ಅವ್ಯವಹಾರ ನಡೆದಿರುವ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ದೂರಿನಲ್ಲಿ ಏನಿದೆ? : ಒನ್ ಇಂಡಿಯಾ ಕನ್ನಡಕ್ಕೆ ದೂರಿನ ಪತ್ರಿ ಸಿಕ್ಕಿದೆ. ಟಿ. ಎಸ್. ಶ್ರೀನಾಥ್ ಕುಕ್ಕೆ ಸುಬ್ರಮಣ್ಯದ ನಿವಾಸಿಯಾಗಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ನಿರ್ದೇಶಕರಾಗಿದ್ದಾರೆ.
ಕುಕ್ಕೆ ಸುಬ್ರಮಣ್ಯ ದೇವಾಲಯದ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ದಾಖಲಾಗಿರುವ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಜ್ರದ ಕಂಠಿಹಾರ, ಆಭರಣಗಳು, ಶ್ರೀ ಸತ್ಯನಾರಾಯಣ ದೇವರ ಫೋಟೋ, ಶ್ರೀ ಕುಕ್ಕೆ ಲಿಂಗ ದೇವಳದ ಬಳಿ ಇದ್ದ ಬೆಳ್ಳಿಯ ಒಡವೆ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮೋನಪ್ಪ ಮಾನಾಡು 22/11/2019ರಂದು ಶ್ರೀ ದೇವಳದ ಆಡಳಿತಾಧಿಕಾರಿ, ಕಾರ್ಯ ನಿರ್ವಹಣಾಧಿಕಾರಿಯವರಲ್ಲಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿರುತ್ತಾರೆ ಎಂದು ದೂರಿನಲ್ಲಿ ವಿವರಣೆ ನೀಡಲಾಗಿದೆ.
ಅರ್ಜಿಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ. 1/8/2020ರಂದು ಮಾಹಿತಿ ಹಕ್ಕು ಕಾಯ್ದೆಯಡಿ ನಾನು (ಟಿ. ಎಸ್. ಶ್ರೀನಾಥ್) ಅರ್ಜಿ ಸಲ್ಲಿಸಿದರೂ ಯಾವುದೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.
ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಸಂಬಂಧಪಟ್ಟ ಕೋಟ್ಯಾಂತರ ರೂಪಾಯಿಗಳ ಬೆಲೆ ಬಾಳುವ ಒಡವೆ, ವಿಗ್ರಹಗಳ ಬಗ್ಗೆ ಯಾವ ಮಾಹಿತಿಯನ್ನೂ ನೀಡದ ಆಡಳಿತಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಲಾಖೆಯ ಆಡಳಿತವಿರುವ ದೇವಾಲಯಲ್ಲಿ ಅವ್ಯವಹಾರ ಮಾಡಿರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದಾಖಲಾತಿಯಲ್ಲಿರುವ ಒಡವೆ, ವಿಗ್ರಹಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಖು ಎಂದು ಟಿ. ಎಸ್. ಶ್ರೀನಾಥ್ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ಶ್ರೀಮಂತ ದೇವಾಲಯ : ಕರ್ನಾಟಕದ ಶ್ರೀಮಂತ ದೇವಾಲಯಗಳಲ್ಲಿ ಕುಕ್ಕೆ ಸುಬ್ರಮಣ್ಯ ಮೊದಲ ಸ್ಥಾನದಲ್ಲಿದೆ. 2018-19ರಲ್ಲಿ ದೇವಾಲಯದ ವಾರ್ಷಿಕ ಆದಾಯ 92,09,13,824 ರೂ.ಗಳು. ಪ್ರತಿನಿತ್ಯ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ.
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ವಿಶೇಷ ಪೂಜೆಗಳನ್ನು ದೇವಾಲಯದಲ್ಲಿ ನಡೆಸುತ್ತಾರೆ. 2007-08ರಲ್ಲಿ ದೇವಾಲಯದ ಆದಾಯ 24.44 ಕೋಟಿ ಇತ್ತು. ಬಳಿಕ ವರ್ಷದಿಂದ ವರ್ಷಕ್ಕೆ ಆದಾಯ ಹೆಚ್ಚುತಲೇ ಇದೆ.












Click it and Unblock the Notifications