ಪುತ್ತೂರು ನ್ಯಾಯಾಲಯದ ಮುಂದೆ ಹಾಜರಾದ ಜಗದೀಶ್ ಕಾರಂತ್
ಮಂಗಳೂರು, ಅಕ್ಟೋಬರ್ 03 : ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪುತ್ತೂರು ಎಸ್ಐ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅವರು ಆರೋಪಿಯಾಗಿದ್ದು, ಜಾಮೀನು ಪಡೆದಿದ್ದಾರೆ.
ಮಂಗಳವಾರ ಪುತ್ತೂರು ನ್ಯಾಯಾಲಯದಲ್ಲಿ ಜಗದೀಶ್ ಕಾರಂತ್ ಪರ ವಕೀಲ ಮಹೇಶ್ ಕಜೆ ಅವರು, 'ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕಿರುವುದರಿಂದ ವಿಚಾರಣೆಯನ್ನು ಅ.4ಕ್ಕೆ ಮುಂದೂಡುವಂತೆ ಮನವಿ ಮಾಡಿದರು'. ಮನವಿ ಪುರಸ್ಕರಿಸಿದ ಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಸೆಪ್ಟಂಬರ್ 15 ರಂದು ಪುತ್ತೂರಿನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಮಾತನಾಡಿದ್ದ ಜಗದೀಶ್ ಕಾರಂತ್, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸಂಪ್ಯ ಪೋಲೀಸ್ ಠಾಣಾಧಿಕಾರಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು.
'ಅಬ್ದುಲ್ ಖಾದರ್ ಅವರನ್ನು ತಲೆ ಬೋಳಿಸಿ ಕತ್ತೆ ಮೇಲೆ ಕೂರಿಸಿ ಯಾಕೆ ಮೆರವಣಿಗೆ ಮಾಡಬಾರದು' ಎನ್ನುವ ರೀತಿಯಲ್ಲಿ ಉದ್ರೇಕಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಪುತ್ತೂರು ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು. ಸೆ.30ರಂದು ಬೆಂಗಳೂರಿನಲ್ಲಿ ಜಗದೀಶ್ ಕಾರಂತ್ ಬಂಧಿಸಲಾಗಿತ್ತು.
ಅಕ್ಟೋಬರ್ 1ರಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜಗದೀಶ್ ಕಾರಂತ್ಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಅರ್ಜಿಯ ವಿಚಾರಣೆಯನ್ನು ಅ.3ಕ್ಕೆ ಮುಂದೂಡಲಾಗಿತ್ತು.












Click it and Unblock the Notifications