'ಬಿಜೆಪಿ ಮೈತ್ರಿ ಸರ್ಕಾರ ಕೆಡವಲು ಷಡ್ಯಂತ್ರ ರೂಪಿಸುತ್ತಿದೆ'
ಮಂಗಳೂರು, ಸೆಪ್ಟೆಂಬರ್.23 : ಬಿಜೆಪಿ ಮುಖಂಡರು ಜನರ ಭಾವನೆಗಳೊಂದಿಗೆ ಆಟವಾಡುತ್ತಾ ಮೈತ್ರಿ ಸರಕಾರವನ್ನು ಕೆಡವಲು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಶನಿವಾರ(ಸೆ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ದಂಗೆ ಹೇಳಿಕೆ ಕುರಿತಂತೆ ಬಿಜೆಪಿಯವರು ಜನರ ಭಾವನೆಗಳ ಜೊತೆಗೆ ಆಟವಾಡುತ್ತಿದ್ದಾರೆ. ಹೇಗಾದರೂ ಮಾಡಿ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ಕೋಮು ಪ್ರಚೋದನೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸೊಲ್ಲೆತ್ತದ ಬಿಜೆಪಿ ನಾಯಕರು ಈಗ ಸಿಎಂ ಹೇಳಿಕೆ ಕುರಿತಂತೆ ಸುಖಾಸುಮ್ಮನೆ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಹಲವಾರು ಬಾರಿ ಸಮಾಜದಲ್ಲಿ ಶಾಂತಿ ಕದಡುವ ಹೇಳಿಕೆ ನೀಡಿದ್ದಾರೆ. ಮಂಗಳೂರು ಹೊರವಲಯ ಮುಡಿಪು ಎಂಬಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಕಟೀಲ್ ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಿಜೆಪಿ ಅವರಿಂದ ಬುದ್ದಿ ಹೇಳಿಸಿಕೊಳ್ಳುವ ಅಗತ್ಯತೆ ಇಲ್ಲ ಎಂದರು.












Click it and Unblock the Notifications