ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪತ್ರಕರ್ತರು ಸೈನಿಕರಂತೆ ಕೆಲಸ ಮಾಡಬೇಕು : ಅನಿತಾ ಪಿಂಟೋ

By Prasad
|
Google Oneindia Kannada News

ಮಂಗಳೂರು, ಮಾರ್ಚ್ 23 : ಸಮಾಜದಲ್ಲಿ ಪತ್ರಕರ್ತರು ತುರ್ತು ಸಂದರ್ಭಗಳಲ್ಲಿ ಸೈನಿಕರಂತೆ, ಕೆಲವೊಮ್ಮೆ ಅವರಿಗೂ ಮುಂಚಿತವಾಗಿ ಸ್ಥಳಕ್ಕೆ ತಲುಪಿ ಕಾರ್ಯ ನಿರ್ವಹಿಸುವ, ಧೈರ್ಯ, ಸ್ಥಿತಪ್ರಜ್ಞತೆ, ಕ್ಷಮತೆಯನ್ನು ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಪತ್ರಕರ್ತೆ ಅನಿತಾ ಪಿಂಟೋ ಅವರು ಹೇಳಿದ್ದಾರೆ.

ಅತ್ಯುತ್ತಮ ಗ್ರಾಮೀಣ ವರದಿಗಾರಿಕೆಗೆ ನೀಡುವ ಪದ್ಯಾಣ ಗೋಪಾಲಕೃಷ್ಣ (ಪಗೋ) ಸ್ಮರಣಾರ್ಥ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಗುರುವಾರ ಮಾತನಾಡುತ್ತಿದ್ದರು. ಈ ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯ ಪ್ರಶಾಂತ್ ಎಸ್ ಸುವರ್ಣ ಅವರು ಭಾಜನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ.ಗೋ.) ಸ್ಮರಣಾರ್ಥ ನೀಡುವ ಪ್ರಶಸ್ತಿಯನ್ನು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

Journalists should work like soldiers : Anita Pinto

2017ರ ಜೂನ್ 03ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ 'ಕೇಳಿಸದೆ ನಮ್ಮ ಕರುಳಿನ ಕೂಗು?' ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.10,001/ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಸಮಾಜಮುಖಿಯಾದ ಹಾಗೂ ಪರಸ್ಪರ ಸಂಬಂಧ ಬೆಸೆಯುವ ವರದಿಗಳನ್ನು ನೀಡಲು ಪತ್ರಕರ್ತರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಸಮಾಜದ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಮಹತ್ತರ ಪಾತ್ರವಿದೆ. ಮೌಲಿಕ ವರದಿಗಳು ಸಮಾಜಕ್ಕೆ ಬೆಳಕು ನೀಡಬಲ್ಲವು ಎಂದು ಅನಿತಾ ಪಿಂಟೋ ತಿಳಿಸಿದರು.

Journalists should work like soldiers : Anita Pinto

ಗುಜರಾತ್ ನಲ್ಲಿ ಸಂಭವಿಸಿದ ಭೀಕರ ಭೂಕಂಪ ಮತ್ತು ದಕ್ಷಿಣ ಭಾರತದಲ್ಲಿ ಸಂಭವಿಸಿದ ಸುನಾಮಿಯ ಸಂದರ್ಭದಲ್ಲಿ ಗುಜರಾತ್, ನಾಗಪಟ್ಟಣಂ ಪ್ರದೇಶಗಳಿಗೆ ಭೇಟಿ ನೀಡಿದಾಗ ತುರ್ತು ಕಾರ್ಯಾಚರಣೆ ನಡೆಸಲು ಸರಕಾರಿ ಯಂತ್ರಗಳು ಆಗಮಿಸುವ ಮೊದಲೆ ಯಾವುದೇ ಅಪಾಯವನ್ನು ಲೆಕ್ಕಿಸದೆ ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ ಎಂದು ತಿಳಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಶಾಂತ್ ಸುವರ್ಣ, ಪ.ಗೋ ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದು ತಿಳಿಸಿ, ಪ್ರಶಸ್ತಿಗೆ ಆಯ್ಕೆ ಮಾಡಿದ ಸಂಘಟಕರು, ಆಯ್ಕೆಗಾರರು ಮತ್ತು ಪ.ಗೋ ಕುಟುಂಬಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

Journalists should work like soldiers : Anita Pinto

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಪ್ರಶಸ್ತಿಯ ತೀರ್ಪುಗಾರರಾದ ಮೌಲ್ಯಾ ಜೀವನ್, ಹಿರಿಯ ಪ್ರತಕರ್ತ ಚಿದಂಬರ ಬೈಕಂಪಾಡಿ, ಪ.ಗೋ. ಪುತ್ರ ವಿಶ್ವೇಶ್ವರ ಪದ್ಯಾಣ, ಶಕುಂತಳಾ ಪದ್ಯಾಣ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಉಪಸ್ಥಿತರಿದ್ದರು.
Journalists should work like soldiers : Anita Pinto

ಸಂಘದ ಮಾಜಿ ಅಧ್ಯಕ್ಷ ಪಿ.ಬಿ .ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕಾ ಭವನ ಟ್ರಸ್ಟ್ ನ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್ ಸ್ವಾಗತಿಸಿದರು, ಪ್ರೆಸ್ ಕ್ಲಬ್ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಸ್ಮರಣಿಕೆ ವಿತರಿಸಿದರು. ಪತ್ರಕರ್ತರ ಸಂಘದ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ವಂದಿಸಿದರು.
English summary
Journalists should have courage, time sense of a soldier and should work like soldiers during emergencies, said veteran journalist Anita Pinto. She was speaking to a gather at Pa Go memorial award function in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X