ವಿನಯ್ ಕುಮಾರ್ ಸೊರಕೆಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಗೆ ಮುಸ್ಲಿಂ ಸಂಘಟನೆಗಳ ಎಚ್ಚರಿಕೆ
ಮಂಗಳೂರು, ಫೆಬ್ರವರಿ 21: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸೊರಕೆ ಅವರ ಕನಸಿಗೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ತಣ್ಣೀರು ಎರಚಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಅಲ್ಪಸಂಖ್ಯಾತರ ವಿರೋಧಿಯಾಗಿರುವ ವಿನಯ ಕುಮಾರ್ ಸೊರಕೆಯವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಬಗ್ಗೆ ಮುಸ್ಲಿಮರು ಪುನರ್ ವಿಮರ್ಶಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಎಚ್ಚರಿಸಿದೆ.
ದಿನೇ ದಿನೇ ಕುತೂಹಲ ಕೆರಳಿಸಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರ..!
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ ಆಶ್ರಫ್, ಮುಸ್ಲಿಮರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಇತರರು ಮತ ಹಾಕುವುದಿಲ್ಲ ಮತ್ತು ಮುಸ್ಲಿಂ ಅಭ್ಯರ್ಥಿಗಳು ಜಯಗಳಿಸುವುದಿಲ್ಲ ಎಂದು ವಿನಯ್ ಕುಮಾರ್ ಸೊರಕೆ ಇತ್ತೀಚೆಗೆ ಬಾಲಿಶವಾದ ಹೇಳಿಕೆ ನೀಡಿದ್ದಾರೆ. ಇದು ಅವರ ಮುರ್ಖತನದ ಯೋಚನೆ.
ಆದರೆ ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ವಿನಯ ಕುಮಾರ್ ಸೊರಕೆ ಕಾಪು ಮತ್ತು ಉಡುಪಿ ಕ್ಷೇತ್ರದಲ್ಲಿ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಮತಗಳ ಬೆಂಬಲದಿಂದ ಜಯಗಳಿಸಿದ್ದರು ಎಂದು ಆಶ್ರಫ್ ತಿಳಿಸಿದರು.
ಮೈಸೂರು ಲೋಕಸಭಾ ಕ್ಷೇತ್ರ:ಬೆಳೆಯುತ್ತಲಿದೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ
ಉಡುಪಿ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ನಗರಸಭೆ ಚುನಾವಣೆಗಳಲ್ಲಿ ಮುಸ್ಲಿಮರು ಮತ್ತು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನಿರಾಕರಿಸಿದ್ದರು ಎಂದ ಆಶ್ರಫ್ ಈ ಮೂಲಕ ನಿರಂತರ ರಾಜಕೀಯ ಪ್ರಾತಿನಿಧ್ಯದಿಂದ ಅಲ್ಪಸಂಖ್ಯಾತರನ್ನು ದೂರವಿರಿಸಲು ಸೊರಕೆ ಯತ್ನಿಸಿದ್ದರೆಂದು ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ :ದ.ಕ.ಕಾಂಗ್ರೆಸ್ ನಿಂದ ಮಿಥುನ್ ರೈಗೆ ಟಿಕೆಟ್ ?
ಅಲ್ಪ ಸಂಖ್ಯಾತ ಸಮುದಾಯದವರನ್ನು ರಾಜಕೀಯ ಅಸ್ತಿತ್ವದಿಂದ ದೂರ ಇರಿಸುವುದು ಸೊರಕೆ ಅವರ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದಿಂದ ವಿನಯ ಕುಮಾರ್ ಸೊರಕೆಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಒಂದು ವೇಳೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಸ್ಲಿಮರು ಕಾಂಗ್ರೆಸ್ ಗೆ ಮತ ನೀಡುವ ಬಗ್ಗೆ ಪುನರ್ ವಿಮರ್ಶಿಲನೆ ಮಾಡಲಿದ್ದಾರೆ ಎಂದು ಆಶ್ರಫ್ ಎಚ್ಚರಿಸಿದರು.