ಏನೇ ಅಡೆತಡೆ ಇದ್ದರೂ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸುವೆ:ಸಿಎಂ
Recommended Video

ಮಂಗಳೂರು, ಸೆಪ್ಟೆಂಬರ್.08: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ . ರಾಜ್ಯದ ಜನತೆಯ ಹಿತದೃಷ್ಟಿಯಿಂದ ರಾಜ್ಯದ ಸೆಸ್ ನ್ನು ಕಡಿತಗೊಳಿಸಿ ಜನರ ಸಂಕಷ್ಟ ಕಡಿಮೆ ಮಾಡುವ ದೃಷ್ಠಿಯಿಂದ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.
ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ವಿಪರೀತ ಏರಿಕೆಯಾಗಿದೆ.
ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡುವ ಬಗ್ಗೆ ಮಾತನಾಡುವ ಬಿಜೆಪಿ ಮುಖಂಡರು ಇಂಧನ ದರ ಏರಿಕೆ ವಿಚಾರದಲ್ಲಿ ಜನತೆಗೆ ಉತ್ತರ ನೀಡುತ್ತಿಲ್ಲ. ಆದರೂ ಜನತೆಯ ಹಿತ ದೃಷ್ಟಿಯಲ್ಲಿಟ್ಟುಕೊಂಡು ಉನ್ನತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ರಾಜ್ಯದ ಸೆಸ್ ಪ್ರಮಾಣ ಕಡಿತಗೊಳಿಸುವ ಬಗ್ಗೆ ಚರ್ಚೆ ನಡೆಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈಗಾಗಲೇ ರೈತರ 45 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ, 6ನೇ ವೇತನ ಆಯೋಗ ಶಿಫಾರಸು ಜಾರಿಗೆ 16 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ಹೊಂದಿಸಬೇಕಾದ ಸವಾಲು ಎದುರಾಗಿದೆ. ಏನೇ ಅಡೆತಡೆ ಇದ್ದರೂ ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸುವೆ ಎಂದು ಕುಮಾರಸ್ವಾಮಿ ವಿಶ್ವಾಸವ್ಯಕ್ತಪಡಿಸಿದರು.

ಪಶ್ಚಿಮಘಟ್ಟ ಉಳಿವಿನ ಕುರಿತು ಗಂಭೀರ ಚಿಂತನೆ
ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಪಶ್ಚಿಮಘಟ್ಟ ಉಳಿವಿನ ಕುರಿತು ಗಂಭೀರ ಚಿಂತನೆ ನಡೆಸಿ ಕಾರ್ಯಯೋಜನೆ ಹಮ್ಮಿಕೊಳ್ಳಲಾಗುವುದು.
ಮುಂದೆ ಕೊಡಗಿನಲ್ಲಿ ಇಂತಹ ದುರಂತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಶಿರಾಡಿ ಘಾಟ್ ನಲ್ಲಿ ಹೆದ್ದಾರಿ ಕುಸಿತಕ್ಕೆ ಸಂಬಂಧಿಸಿ ಎಂಜಿನಿಯರ್ ಗಳಿಂದ ಅಧ್ಯಯನ ನಡೆಸಿ ಸಮಗ್ರ ವರದಿಯನ್ನು ನೀಡುವಂತೆ ಕೋರಲಾಗಿದೆ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ
"ಪ್ರಗತಿ ಪರಿಶೀಲನಾ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ಬಾಧಿಸಿರುವ ಕೊಳೆ ಹಾಗು ಹಳದಿ ರೋಗ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ರಾಜ್ಯ ಸರಕಾರದಿಂದ ಹೆಚ್ಚಿನ ಪರಿಹಾರ ಧನಕ್ಕಾಗಿ ಈ ಭಾಗದ ಶಾಸಕರು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯಿಂದ ಹೆಚ್ಚಿನ ಅನುದಾನಕ್ಕೆ ಪ್ರಯತ್ನಿಸಲಾಗುವುದು.
ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಅತಿವೃಷ್ಠಿಯಿಂದ ಅಪಾರ ಹಾನಿ ಸಂಭವಿಸಿದೆ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಹಾನಿಯಿಂದ 213 ಕೋಟಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ನಷ್ಟ ಪರಿಹಾರ ಒದಗಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರಿಗೆ ಸಂಪೂರ್ಣ ಅಧಿಕಾರ ಕೊಡಲಾಗಿದೆ" ಎಂದು ಸಿಎಂ ಸ್ಪಷ್ಟಪಡಿಸಿದರು.

ಎಂಡೋಸಂತ್ರಸ್ತರಿಗೆ ಶಾಶ್ವತ ಪರಿಹಾರ
ಅಡಿಕೆ ಬೆಳೆ ಬೆಳೆಯಲಾಗುವ 38 ಸಾವಿರ ಹೆಕ್ಟೇರ್ ಪೈಕಿ 19 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. ಕೊಳೆ ರೋಗ, ಹಳದಿ ರೋಗದಿಂದ ಅಡಿಕೆ ಬೆಳೆ ನಾಶವಾಗಿದೆ. ನಷ್ಟದ ಮಾಹಿತಿ ಜನಪ್ರತಿನಿಧಿಗಳು ಸಭೆಯಲ್ಲಿ ಪ್ರಸ್ತುತಪಡಿಸಿದ್ದಾರೆ. ನಷ್ಟ ಪರಿಹಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.
ಬೆಳೆ ಹಾನಿ ಹಾಗು ನಷ್ಟ ಪರಿಹಾರದ ಕುರಿತು ಚರ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ಸಭೆಯನ್ನು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕರೆಯುತ್ತೇನೆ.
ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ಸಮಗ್ರ ವರದಿ ಕೇಳಿದ್ದೇನೆ. ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಶಾಶ್ವತ ಯೋಜನೆ ಮಾಡಲಾಗುವುದು.
ಎಂಡೋಸಲ್ಫಾನ್ ಸಂತ್ರಸ್ತ ರಿಗೆ ರಾಜ್ಯ ಸರ್ಕಾರದ ಪ್ರಥಮ ಆದ್ಯತೆ ನೀಡುತ್ತದೆ. ಜಿಲ್ಲಾಧಿಕಾರಿ ಅವರ ವರದಿಯ ಬಳಿಕ ಎಂಡೋಸಂತ್ರಸ್ತರಿಗೆ ಶಾಶ್ವತ ಪರಿಹಾರ ಯೋಜನೆ ಸಿದ್ದ ಪಡಿಸಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರಕಾರ ಉರುಳಿಸುವ ಟಾರ್ಗೆಟ್ ಇದೆ
ಕೇಂದ್ರದ ತನಿಖಾ ಸಂಸ್ಥೆಗಳು ತಮ್ಮನ್ನು ಟಾರ್ಗೆಟ್ ಮಾಡುತ್ತಿರುವ ವಿಚಾರದ ಕುರಿತು ಮಾತನಾಡಿದ ಅವರು ಮಾಹಿತಿ ಇದ್ದುದರಿಂದಲೇ ಹಾಗೆ ಹೇಳಿದ್ದೇನೆ. ಬಿಜೆಪಿಯವರಿಗೆ ಸರಕಾರ ಉರುಳಿಸುವ ಟಾರ್ಗೆಟ್ ಇದೆ. ಅದಕ್ಕಾಗಿ ಆಗಾಗ ಗಡುವು ವಿಧಿಸುತ್ತಿರುತ್ತಾರೆ.
ಮುಂದಿನ ಟಾರ್ಗೆಟ್ ಗಣೇಶನ ಹಬ್ಬ ಇರಬಹುದು ಅಥವಾ ಅಕ್ಟೋಬರ್ 2ರ ಗಾಂಧಿ ಜಯಂತಿಯ ವರೆಗೂ ಮುಹೂರ್ತ ಇಡಬಹುದು. ಹೀಗೆ ಮುಹೂರ್ತ ಇಡುತ್ತಲೇ ಇರುತ್ತಾರೆ. ಹೇಳಿಕೆ ಗಳನ್ನು ಕೊಡುತ್ತಲೇ ಇರುತ್ತಾರೆ ಎಂದು ಕುಮಾರಸ್ವಾಮಿ ವ್ಯಂಗ್ಯ ವಾಡಿದರು .

ನಳೀನ್ ಕುಮಾರ್ ಕಟೀಲ್, ಭೋಜೆಗೌಡ ನಡುವೆ ವಾಗ್ವಾದ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಯ ಎದುರೇ ಸಂಸದ ನಳೀನ್ ಕುಮಾರ್ ಕಟೀಲ್ ಹಾಗು ಜೆಡಿಎಸ್ ಮುಖಂಡ ಭೋಜೆಗೌಡ ಅವರ ನಡುವೆ ವಾಗ್ವಾದ ನಡೆದಿದೆ. ಮಳೆ ಹಾನಿ ವಿಚಾರದಲ್ಲಿ ರಾಜಕೀಯ ಬೇಡ. ನೀವು ರಾಜಕೀಯ ಮಾಡುತ್ತಿದ್ದಿರಿ.
ಸರ್ವೇ ಸರಿಯಾಗಿ ನಡೆಸಲು ಹೇಳಿ ಎಂದು ಜೆಡಿಎಸ್ ಮುಖಂಡ ಭೋಜೇಗೇಡರಿಗೆ ನಳಿನ್ ಕುಮಾರ್ ಕುಟುಕಿದರು. ಈ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಇಬ್ಬರನ್ನೂ ಸಮಾಧಾನಪಡಿಸಿದರು.
ಮಂಗಳೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲೆಯ ಶಾಸಕರ ವಾಹನವನ್ನು ಗೇಟಿನಿಂದ ಒಳಗೆ ಬಿಡದ ಪೊಲೀಸರ ವರ್ತನೆಗೆ ಸಿಡಿಮಿಡಿಗೊಂಡ ಶಾಸಕರು ನೇರವಾಗಿ ಸಿಎಂ ಬಳಿ ಧಾವಿಸಿ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಕೂಡ ನಡೆಯಿತು.












Click it and Unblock the Notifications