ದಕ್ಷಿಣ ಕನ್ನಡ ಜಿಲ್ಲೆಯ ಅತೃಪ್ತ ಬಿಜೆಪಿ ನಾಯಕರಿಗೆ ಜೆಡಿಎಸ್ ಗಾಳ
ಮಂಗಳೂರು ಏಪ್ರೀಲ್ 17 : ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ.
ಪುತ್ತೂರು ಕ್ಷೇತ್ರದಿಂದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನೀಡಿರುವುದರ ವಿರುದ್ದ ಬಿಜೆಪಿ ಮುಖಂಡ ಹಾಗು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರ ಆಪ್ತ ಅಶೋಕ್ ಕುಮಾರ್ ರೈ ಕಾರ್ಯಕರ್ತರು ಬಂಡಾಯವೆದ್ದಿದ್ದಾರೆ. ಈ ನಡುವೆ ಅತೃಪ್ತ ಬಿಜೆಪಿ ನಾಯಕರಿಗೆ ಜೆಡಿಎಸ್ ಗಾಳ ಹಾಕಿದೆ.
ಬಿಜೆಪಿಗೆ ಮಂಗಳೂರಿನ 3 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು
ಪುತ್ತೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ಕುಮಾರ್ ರೈ ಅವರ ಜತೆ ನೇರ ದೂರವಾಣಿ ಕರೆ ಮಾಡಿ ಮಾತಾಡಿರುವ ಜೆಡಿಎಸ್ ರಾಜ್ಯಾಧ್ಯಕ ಎಚ್.ಡಿ ಕುಮಾರಸ್ವಾಮಿ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಮುಂದಿನ ಚುನಾವಣೆಗೆ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ.
ಪುತ್ತೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾದರೆ ಟಿಕೆಟ್ ನೀಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ಮಾಡುವುದಾಗಿ ಅಶೋಕ್ ಕುಮಾರ್ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಕಣಕ್ಕೆ ಇಳಿಯುತ್ತಿರುವ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ಅರುಣ್ ಕುಮಾರ್ ಪುತ್ತಿಲ ಪರ ಬಿಜೆಪಿ ಕಾರ್ಯಕರ್ತರು ಪ್ರಚಾರ ದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.